ಉಡುಪಿ: ಜನವರಿ 26:ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಯೋಜನೆಯ ಫಲಾನುಭವಿಗಳಿಗೆ ನೀಡುವ ಸಾಲ ಸೌಲಭ್ಯಕ್ಕೆ ಯಾವುದೇ ಕಡಿಮೆ ಸಿಬಿಲ್ ಸ್ಕೋರ್ ಮಾನದಂಡ ಅನ್ವಯಿಸುವುದಿಲ್ಲ ಎಂದು ಕೇಂದ್ರ ಹಣ ಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಇಲಾಖೆ ಉಪಕಾರ್ಯದರ್ಶಿ ಅವರು ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ (ಎಸ್ಎಲ್ಬಿಸಿ) ಗೆ ನೀಡಿದ ಪತ್ರವನ್ನು ಉಲ್ಲೇಖಿಸಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಯಾವುದೇ ಕಾರಣಕ್ಕೂ ವಿಶ್ವಕರ್ಮ ಯೋಜ ನೆಗೆ ಸಿಬಿಲ್ ಸ್ಕೋರ್ ಅನ್ವಯಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಹಿಂದೆಯೇ ನೀಡಿರುವ ಸುತ್ತೋಲೆಯಲ್ಲಿ ಕ್ರೆಡಿಟ್ ಸ್ಕೋರ್ ಅಗತ್ಯವಿಲ್ಲ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳುತ್ತಿ ದ್ದರೂ ಬ್ಯಾಂಕ್ಗಳು ಗೊಂದಲವಿಲ್ಲದೆ ಸಾಲ ಸೌಲಭ್ಯ ನೀಡಲು ಮುಂದಾಗಬೇಕೆಂದು, ಸಾಲದ ಯಾವುದೇ ಭಾಗವನ್ನು ಮುಂಗಡ ಠೇವಣಿಯಾಗಿ ಇರಿಸಲು ಒತ್ತಾಯಿಸಬಾರದೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ಕುರಿತಂತೆ ತಾನು ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿ ದೇಶಾದ್ಯಂತ ವಿಶ್ವಕರ್ಮ ಯೋಜನೆಯಲ್ಲಿ ಸಿಬಿಲ್ ಸ್ಕೋರ್ ಸಮಸ್ಯೆ ಪರಿಹಾರ ಮಾಡಿದ್ದಕ್ಕಾಗಿ ಸಂಸದ ಕೋಟ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಅಲ್ಲದೇ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳು ಇದನ್ನು ಅನುಷ್ಠಾನ ಮಾಡಬೇಕೆಂದು ಮನವಿ ಮಾಡಿದ್ದಾರೆ.








