ಉಡುಪಿ, ಫೆಬ್ರವರಿ .22: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು ಎಂಟರ್ಪ್ರಿನೋರ್ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದೆ.
ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ ನಾಲ್ವರು ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ ಮೂವರು ಅಭ್ಯರ್ಥಿಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಜಿಲ್ಲೆಯಲ್ಲಿ ತರಬೇತಿ ಪಡೆಯಲು 10ನೇ ತರಗತಿ ಉತ್ತೀರ್ಣರಾಗಿರುವ 20ರಿಂದ 45 ವರ್ಷ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.








