ಬೆಂಗಳೂರು, ಜೂನ್ 04: ಐಪಿಎಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆಗೆ ಆಗಮಿಸಿದ್ದಾರೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದು ಈ ವೇಳೆ ಸಂಭವಿಸಿದ ಕಾಲ್ತುಳಿತ ದಲ್ಲಿ ಏಳು ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ ಎನ್ನುವುದಾಗಿ ವರದಿ ಆಗಿದೆ
ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. 10 ಮಂದಿ ಅಭಿಮಾನಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇದೇ ವೇಳೆ ಬ್ಯಾರಿಕೇಡ್ ಬಿದ್ದು ಮೂವರ ಕಾಲು ಮುರಿದಿದೆ. ಆರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ.