ಬೆಂಗಳೂರು: ಆಗಸ್ಟ್ 15:ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಇಂದಿನಿಂದಲೇ ಜಾರಿಯಾಗಿದೆ. ದೇವಸ್ಥಾನಗಳ ಒಳಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ದಂಡ ವಿಧಿಸಲು ಸೂಚನೆ ನೀಡಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.








