ಬಂಟ್ವಾಳ: ನವೆಂಬರ್ 15: ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ತೀವ್ರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಅಪಘಾತ ದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಕಾರಿನಲ್ಲಿದ್ದ ರಮ್ಯ(23), ರವಿ(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








