ಹೊನ್ನಾವರ :ಡಿಸೆಂಬರ್ 1: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳ ಪ್ರವಾಸ ದುರಂತದಲ್ಲಿ ಕೊನೆಗೊಂಡಿದೆ.
ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಉತ್ತರ ಕನ್ನಡದ ಹೊನ್ನಾವರದ ಸಮೀಪದ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








