ಮೂಡುಬಿದಿರೆ ಜ. 30:ಅಗ್ನಿಪಥ್ ನೇಮಕಾತಿ ರ್ಯಾಲಿ ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಫೆಬ್ರವರಿ 14ರವರೆಗೆ ನಡೆಯಲಿದೆ; 10 ದಿನಗಳಲ್ಲಿ 15,000 ಮಂದಿ ಅಭ್ಯರ್ಥಿಗಳ ಭಾಗವಹಿಸುವಿಕೆ ನಿರೀಕ್ಷೆ
ಸ್ವರಾಜ್ಯ ಮೈದಾನವು ಅಗ್ನಿಪಥ್ ಯೋಜನೆಯಡಿ ನಡೆಯಲಿರುವ ಭಾರತೀಯ ಸೇನೆಯ ನೇಮಕಾತಿ ರ್ಯಾಲಿಗಾಗಿ ಸಂಪೂರ್ಣ ಸಿದ್ಧವಾಗಿದೆ. ಶುಕ್ರವಾರ ಬೆಳಗ್ಗೆ 3 ಗಂಟೆಯಿಂದ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 11 ಜಿಲ್ಲೆಗಳಿಂದ ಪ್ರತಿದಿನ ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟು 10 ದಿನಗಳಲ್ಲಿ ಸುಮಾರು 15,000 ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನೇಮಕಾತಿ ಅಧಿಕಾರಿಗಳು ತಿಳಿಸಿದ್ದಾರೆ.
ರ್ಯಾಲಿಯಲ್ಲಿ ಮೊದಲ ಹಂತವಾಗಿ ದೈಹಿಕ ಪರೀಕ್ಷೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತ ದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಆಯೋಜಕರು ಕಲ್ಪಿಸಿದ್ದಾರೆ. ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ರ್ಯಾಲಿಗೆ ಕೈಜೋಡಿಸಿವೆ.
ನೇಮಕಾತಿ ರ್ಯಾಲಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಪೂರ್ಣ ಸಹಕಾರ ನೀಡುತ್ತಿದ್ದು, ವಿದ್ಯಾಗಿರಿ ಆವರಣದಲ್ಲಿ ವಸತಿ ವ್ಯವಸ್ಥೆ ಸ್ವಯಂಸೇವಕರ ನಿಯೋಜನೆ, ಸಿಂಥೆಟಿಕ್ ಟ್ರಾಕ್ನಲ್ಲಿ ರನ್ನಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಆಳ್ವಾಸ್ 150 ಮಂದಿ ಎನ್ಸಿಸಿ, ಎನ್ಎಸ್ಎಸ್ ಸ್ವಯಂಸೇವಕರು, 25 ಸಿಬ್ಬಂದಿಗಳು ರ್ಯಾಲಿಗೆ ಶ್ರಮಿಸುತ್ತಿದ್ದಾರೆ.
ವಿದ್ಯಾಗಿರಿಯಲ್ಲಿ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ಆರೋಗ್ಯ ಸೇವೆ, ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಆಹಾರ ವಸ್ತುಗಳನ್ನು ಸರ್ಕಾರ ಒದಗಿಸಿದ್ದು, ಶುಚಿರುಚಿಯಾಗಿ ಆಳ್ವಾಸ್ನ ತಂಡ ತಯಾರಿಸಲಿದೆ ಎಂದು ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಮಾಹಿತಿ ನೀಡಿದ್ದಾರೆ.





