ಬೆಂಗಳೂರು,ಫೆ.11: ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರು ವಿಧಿವಶರಾಗಿದ್ದಾರೆ. ‘ಹಿಂದೂ ರಾಮಯ್ಯ’ ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದ ಅವರು, ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ರಾತ್ರಿ ನಿಧನರಾದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ.
ರಾಮಯ್ಯ ಅವರ ಅಗಲುವಿಕೆಗೆ ಸಿಎಂ ಸಿದ್ದರಾಮಯ್ಯ, ಆದಿಚುಂಚನಗಿರಿ ಮಠಾಧ್ಯಕ್ಷರಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ಪಿ. ರಾಮಯ್ಯ ಅವರು ಕರ್ನಾಟಕದ ಪ್ರಸಿದ್ದ ಹಿರಿಯ ಪತ್ರಕರ್ತರು, ಇವರು ಸುಮಾರು 45 ವರ್ಷಗಳ ಕಾಲ The Hindu ಪತ್ರಿಕೆಯ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲಾಗುತ್ತದೆ.
ಭಗವಂತ ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅದರಲ್ಲಿಯೂ ವಿಶೇಷವಾಗಿ ಅವರ ಧರ್ಮಪತ್ನಿ ಶ್ರೀಮತಿ ರಾಮಯ್ಯ ಅವರಿಗೆ ಮತ್ತು ಶ್ರೀಯುತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.







