ಪುತ್ತೂರು: ಫೆಬ್ರವರಿ 13: ಭಾರತ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕು ಎಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು ಎಂದು ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಹೇಳಿದರು.
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಮತ್ತು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ 25ನೇ ಸಂಚಿಕೆಯ ‘ವಿವೇಕ ಸ್ಮೃತಿ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಯುವಕರು ತಮ್ಮ ಹೆಜ್ಜೆಗುರುತು ಸ್ಪಷ್ಟವಾಗಿ ಉಳಿಯುವಂತೆ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಪ್ರತಿಯೊಬ್ಬ ಭಾರತೀಯನು ವಿದ್ಯಾವಂತನಾಗಬೇಕು. ವಿವೇಕಾನಂದರ ನೈತಿಕತೆ ಮತ್ತು ವ್ಯಕ್ತಿತ್ವವನ್ನು ಅಳವಡಿಸಿಕೊಂಡು ಉನ್ನತ ಗುರಿ ಹೊಂದಿದರೆ ದೇಶವನ್ನು ಬೆಳಗಿಸುವ ಶಕ್ತಿ ಯುವಕರಲ್ಲಿದೆ ಎಂದು ಹೇಳಿದರು. ನಮ್ಮಿಂದ ಯಾವುದೂ ಸಾಧ್ಯವಿಲ್ಲ ಎಂದುಕೊಂಡಾಗ ಸ್ವಾಮೀಜಿಯವರ ಚಿಂತನೆಗಳು ಆತ್ಮಸ್ಥೈರ್ಯ ತುಂಬುತ್ತವೆ. ಇಂದಿಗೂ ರಾಷ್ಟ್ರದ ಅನೇಕ ಪ್ರಗತಿಪರ ಕಾರ್ಯಗಳಿಗೆ ಅವರೇ ಸ್ಫೂರ್ತಿ ಎಂದು ಅವರು ಅಭಿಪ್ರಾಯಪಟ್ಟರು.
ಇಂದಿನ ಯುವಕರು ಬಲಿಷ್ಠರು, ವಿದ್ಯಾವಂತರು ಹಾಗೂ ಉತ್ತಮ ಚಿಂತನೆ ಹೊಂದಿದ ಭಾರತದ ಪ್ರಜೆಗಳಾಗಿ ರೂಪುಗೊಳ್ಳಬೇಕು. ಭಾರತವು ವಿಶ್ವದ ಐದನೇ ಶ್ರೀಮಂತ ರಾಷ್ಟ್ರವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ರವಿನಾರಾಯಣ ಎಮ್ ಮಾತನಾಡಿ, ವಿಕಸಿತ ಮತ್ತು ಆತ್ಮನಿರ್ಭರ ಭಾರತದ ಕನಸಿಗೆ ವಿವೇಕಾನಂದರೇ ಪ್ರೇರಣೆ ಎಂದರು. ಭಾರತವು ಆಧ್ಯಾತ್ಮ ಚಿಂತನೆಗೆ ಪೂರಕವಾಗಿ ಮುಂದುವರಿದರೆ ವಿಶ್ವಗುರುವಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಹಿರಿಯ ಪ್ರಾಧ್ಯಾಪಕ ರಾಧಾಕೃಷ್ಣ ರೈ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಶೋಧನಾ ಕೇಂದ್ರದ ನಿರ್ದೇಶಕಿ ಹಾಗೂ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ ಸ್ವಾಗತಿಸಿದರು. ಶಿಕ್ಷಕಿ ಕವಿತಾ ಕೆ.ಜಿ ವಂದಿಸಿದರು. ವಿದ್ಯಾರ್ಥಿ ನವೀನ್ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.







