ಸುಳ್ಯ, ಫೆ. 16 : ಪೆರಾಜೆ ಸಮೀಪದ ಕುಕ್ಕುಂಬಳ ಸೇತುವೆಯ ಮೇಲೆ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಫೆಬ್ರವರಿ 14ರ ಶನಿವಾರ ರಾತ್ರಿ ನಡೆದಿದೆ. ಗಾಯಾಳುವನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರನ್ನು ಅಂಜಿಕ್ಕಾರ್ ಸುಂದರ ನಾಯ್ಕ ಅವರ ಪುತ್ರ ರವಿಚಂದ್ರ ನಾಯ್ಕ ಎಂದು ಗುರುತಿಸಲಾಗಿದೆ. ಅವರು ಸುಳ್ಯದಿಂದ ತಮ್ಮ ಮನೆಗೆ ಮರಳುತ್ತಿದ್ದ ವೇಳೆ ರಾತ್ರಿ ಸುಮಾರು 8 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇದೇ ಸ್ಥಳದಲ್ಲಿ ಈ ಹಿಂದೆ ಸಹ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ನಡೆದಿತ್ತು. ಸೇತುವೆಗೆ ಸಮರ್ಪಕ ತಡೆಗೋಡೆ ಅಥವಾ ಭದ್ರತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇನ್ನಷ್ಟು ಅಪಘಾತಗಳು ಸಂಭವಿಸುವ ಮುನ್ನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಎಚ್ಚೆತ್ತುಕೊಂಡು ಸೇತುವೆಗೆ ಭದ್ರತಾ ತಡೆಗೋಡೆ ನಿರ್ಮಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.







