ಉಡುಪಿ, ಫೆ.17: ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ವೇಳೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಯಶ್ ಪಾಲ್ ಸುವರ್ಣ ಅವರು ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಅವರ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾಗಿ ಚರ್ಚಿಸಿದರು.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಮೀನುಗಾರರು ಆಳ ಸಮುದ್ರ ಮೀನುಗಾರಿಕೆ ನಡೆಸುವ ಸಂದರ್ಭಗಳಲ್ಲಿ ಸಮನ್ವಯತೆಯ ಕೊರತೆ ಹಾಗೂ ಮಾಹಿತಿ ಅಭಾವದಿಂದ ನಿಗದಿತ ವ್ಯಾಪ್ತಿಯನ್ನು ಮೀರಿದ ಆರೋಪದಲ್ಲಿ ಮಹಾರಾಷ್ಟ್ರ ಮೀನುಗಾರಿಕಾ ಇಲಾಖೆ ಪ್ರಕರಣ ದಾಖಲಿಸಿ ಹೆಚ್ಚಿನ ದಂಡ ವಿಧಿಸುವ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದ ಮೀನುಗಾರರು ಸಂಕಷ್ಟ ಅನುಭವಿಸುತ್ತಿರುವುದಾಗಿ ಶಾಸಕ ಯಶ್ ಪಾಲ್ ಸುವರ್ಣ ಸಚಿವರಿಗೆ ವಿವರಿಸಿ, ಇಂತಹ ಪ್ರಕರಣಗಳನ್ನು ಕೈಬಿಟ್ಟು ಮೀನುಗಾರರಿಗೆ ನೆರವು ನೀಡುವಂತೆ ಮನವಿ ಮಾಡಿದರು.
ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ಒತ್ತಾಯ
ಪಶ್ಚಿಮ ಮತ್ತು ಪೂರ್ವ ಕರಾವಳಿ ರಾಜ್ಯಗಳ ನಡುವೆ ಮೀನುಗಾರಿಕಾ ಚಟುವಟಿಕೆಗಳಲ್ಲಿ ಸಮನ್ವಯತೆ ಸಾಧಿಸಲು ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ತರಲು ಸಹಕಾರ ನೀಡುವಂತೆ ಹಾಗೂ ಎಲ್ಲಾ ರಾಜ್ಯಗಳ ಮೀನುಗಾರಿಕಾ ಸಚಿವರು ಮತ್ತು ಮುಖಂಡರನ್ನು ಒಳಗೊಂಡ ಅಂತಾರಾಜ್ಯ ಸಮನ್ವಯ ಸಮಿತಿ ರಚಿಸುವಂತೆ ಅವರು ಮನವಿ ಮಾಡಿದರು. ಈಗಾಗಲೇ ಗೋವಾ ಸರ್ಕಾರದ ಮೀನುಗಾರಿಕಾ ಸಚಿವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಮಲ್ಪೆ ಬಂದರಿಗೆ ಆಹ್ವಾನ
ಏಷ್ಯಾದಲ್ಲೇ ಅತಿ ದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದೆಂದು ಪ್ರಸಿದ್ಧಿಯಾಗಿರುವ ಮಲ್ಪೆ ಮೀನುಗಾರಿಕಾ ಬಂದರುದಲ್ಲಿ ಸಾವಿರಾರು ಬೋಟ್ಗಳು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವೈಜ್ಞಾನಿಕ ಮೀನುಗಾರಿಕೆ ನಡೆಸುತ್ತಿವೆ. ಮಹಾರಾಷ್ಟ್ರ ಮೀನುಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳ ನಿಯೋಗದೊಂದಿಗೆ ಮಲ್ಪೆ ಬಂದರಿಗೆ ಭೇಟಿ ನೀಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಸಚಿವ ನಿತೇಶ್ ರಾಣೆ ಅವರಿಗೆ ಆಹ್ವಾನ ನೀಡಿದರು.
ಸಚಿವರಿಂದ ಭರವಸೆ
ಶಾಸಕರ ಮನವಿಗೆ ಸ್ಪಂದಿಸಿದ ಸಚಿವ ನಿತೇಶ್ ರಾಣೆ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ರಾಷ್ಟ್ರೀಯ ಮೀನುಗಾರಿಕಾ ನೀತಿಯ ಕುರಿತು ಸಹಮತ ಸೂಚಿಸಿ, ಅಂತಾರಾಜ್ಯ ಸಮನ್ವಯ ಸಮಿತಿ ರಚನೆಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು. ಮಲ್ಪೆ ಬಂದರಿಗೆ ಭೇಟಿ ನೀಡುವ ಇಂಗಿತವನ್ನೂ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಂಬೈ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಅರವಿಂದ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಕುಂದರ್, ಕಿಶನ್ ಶೆಟ್ಟಿ, ಅಮಿತ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






