ಬೆಂಗಳೂರು, ಫೆ. 20: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ‘ನಂದಿನಿ’ ಉತ್ಪನ್ನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿಯನ್ನು ಹಂಚಿದ ಆರೋಪದ ಮೇರೆಗೆ ಖಾಸಗಿ ಆಸ್ಪತ್ರೆಯ ವೈದ್ಯೆಯ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಂಎಫ್ ಆಡಳಿತ ವಿಭಾಗದ ನಿರ್ದೇಶಕಿ ಆರ್. ಪದ್ಮಾವತಿ ನೀಡಿದ ದೂರಿನ ಆಧಾರದ ಮೇಲೆ ಮಾಲೂರು ಬಾಲಾಜಿ ಕ್ಲಿನಿಕ್ನ ವೈದ್ಯೆ ಶರಣ್ಯಾ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿ 8ರಂದು ವೈದ್ಯೆ ಶರಣ್ಯಾ ನಂದಿನಿ ಉತ್ಪನ್ನಗಳಾದ ಕ್ರೀಮ್ ಬನ್, ಸ್ಟ್ರಾಬೆರಿ ಫ್ಲೇವರ್ಡ್ ಮಿಲ್ಕ್ ಹಾಗೂ ತಂಪು ಪಾನೀಯಗಳನ್ನು ದಿನನಿತ್ಯ ಸೇವಿಸುವುದರಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿ ರೀಲ್ಸ್ ರೂಪದಲ್ಲಿ ವಿಡಿಯೊ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು ಎನ್ನಲಾಗಿದೆ.
ಅದೇ ರೀಲ್ಸ್ನಲ್ಲಿ, ಇಂತಹ ಉತ್ಪನ್ನಗಳ ಸೇವನೆಯಿಂದ ಸ್ಟಿರಾಯ್ಡ್ಗಳಂತಹ ಔಷಧೋಪಚಾರ ಅವಶ್ಯಕವಾಗುವ ಪರಿಸ್ಥಿತಿ ಉಂಟಾಗಬಹುದು, ದೀರ್ಘಾವಧಿಯಲ್ಲಿ ಕ್ಯಾನ್ಸರ್ ಅಪಾಯವೂ ಇರಬಹುದು ಎಂದು ಹೇಳಿ, ಇಂತಹ ಉತ್ಪನ್ನಗಳಿಗೆ ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಹೇಗೆ ಅನುಮತಿ ನೀಡಿದೆ ಎಂಬ ಪ್ರಶ್ನೆಯನ್ನೂ ಎತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹೇಳಿಕೆಗಳಿಂದ ಕೆಎಂಎಫ್ನ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.







