ಶಿರಸಿ, ಫೆ.20: ವಿಶ್ವಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿರುವ ಆನ್ಲೈನ್ ವಂಚನೆ ಪ್ರಕರಣಗಳ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿ ಭಕ್ತರಿಗೆ ಎಚ್ಚರಿಕೆ ನೀಡಿದೆ.
ಇತ್ತೀಚೆಗೆ ವಾಟ್ಸಾಪ್, ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು, ಜಾತ್ರೆಯ ವಿವಿಧ ಸೇವೆಗಳ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುತ್ತಿರುವುದು ದೇವಸ್ಥಾನದ ಗಮನಕ್ಕೆ ಬಂದಿದೆ. ಅಪರಿಚಿತರು ಹಾಗೂ ಖಾಸಗಿ ವ್ಯಕ್ತಿಗಳ ಬ್ಯಾಂಕ್ ಖಾತೆಗಳಿಗೆ ಯಾವುದೇ ರೀತಿಯ ಹಣ ವರ್ಗಾವಣೆ ಮಾಡಬಾರದು ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ದೇವಸ್ಥಾನಕ್ಕೆ ದೇಣಿಗೆ ಅಥವಾ ಸೇವಾ ಶುಲ್ಕ ಪಾವತಿಸಲು ಇಚ್ಛಿಸುವವರು ಕೇವಲ ದೇವಸ್ಥಾನದ ಅಧಿಕೃತ ವೆಬ್ಸೈಟ್ www.marikambatemple.com ಮುಖಾಂತರವೇ ವ್ಯವಹಾರ ನಡೆಸಬೇಕು. ಅಲ್ಲದೇ ನೇರವಾಗಿ ದೇವಸ್ಥಾನದ ಕಚೇರಿಗೆ ಭೇಟಿ ನೀಡಿ ಪಾವತಿ ಮಾಡಿ ಅಧಿಕೃತ ರಸೀದಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.
ಅನಧಿಕೃತ ವ್ಯಕ್ತಿಗಳ ಆಮಿಷಗಳಿಗೆ ಒಳಗಾಗಿ ಹಣ ಕಳೆದುಕೊಳ್ಳದಂತೆ ಭಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಆರ್.ಜಿ. ನಾಯ್ಕ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.







