ಕಾರವಾರ, ಫೆ. 23:ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಮುಂದಿನ ಜೂನ್ ತಿಂಗಳೊಳಗಾಗಿ ನಡೆಸಲಾಗುವುದು. ಈ ಕುರಿತು ಯಾವುದೇ ಅನುಮಾನ ಅಥವಾ ಗೊಂದಲ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿ–ಗಂಗಾವಳಿ ಸೇತುವೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬೇಡಿಕೆ ಸರ್ಕಾರದ ಗಮನದಲ್ಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪೂರ್ಣಗೊಂಡ ಬಳಿಕ ಗೋಕರ್ಣಕ್ಕೆ ಪಟ್ಟಣ ಪಂಚಾಯಿತಿ ಹುದ್ದೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಉಲ್ಲೇಖಿಸಿದ ಸಿಎಂ, ಪುನರ್ಪ್ರಸ್ತಾವ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದರು.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿತ 450 ಹಾಸಿಗೆಗಳ ಬಹು ವಿಶೇಷತೆಗಳ ಆಸ್ಪತ್ರೆ ಕಟ್ಟಡ, ಯಲ್ಲಾಪುರ ತಾಲೂಕಿನ ಖಾನಾಪುರ–ತಾಳಗುಪ್ಪ ರಾಜ್ಯ ಹೆದ್ದಾರಿ 93ರ ನೂತನ ಸೇತುವೆ, ಯಲ್ಲಾಪುರ ಪಟ್ಟಣದ ಹೊಸ ನಿರೀಕ್ಷಣಾ ಮಂದಿರ ಹಾಗೂ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರವನ್ನು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.
ಗ್ಯಾರಂಟಿ ಯೋಜನೆಗಳ ಜತೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೆ ತಂದು ರಾಜ್ಯವನ್ನು ಪ್ರಗತಿಯ ದಿಕ್ಕಿನಲ್ಲಿ ಮುನ್ನಡೆಸುತ್ತಿದ್ದೇವೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದು ಸಿಎಂ ಹೇಳಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್ ಹಾಗೂ ಮಂಕಾಳ ವೈದ್ಯ, ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.







