ಮಣಿಪಾಲ, ಫೆ. 23:ಜಿಲ್ಲೆಯಲ್ಲಿ ಮೀನುಗಾರರ ಸಂಖ್ಯೆ ಹೆಚ್ಚು ಇರುವ ಹಿನ್ನೆಲೆಯಲ್ಲಿ, ಅವರ ಸಮಗ್ರ ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ಮತ್ತು ಗುರಿ ನಿಗದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲ್ಪೆ ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಮೀನುಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುವ ಆರ್ಥಿಕ ಸೌಲಭ್ಯಗಳು ಮತ್ತು ಸಹಾಯಧನಗಳ ಬಗ್ಗೆ ಸಮರ್ಪಕ ಮಾಹಿತಿ ಫಲಾನುಭವಿಗಳಿಗೆ ತಲುಪಿಸಬೇಕು. ಅವರಿಗೆ ಸ್ವಾವಲಂಬಿ ಜೀವನ ನಡೆಸಲು ನೆರವಾಗುವಂತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಪ್ರಸ್ತುತ ನಿಗದಿಪಡಿಸಿರುವ ಅನುದಾನ ಮತ್ತು ಗುರಿಗಳು ಜಿಲ್ಲೆಯ ಅಗತ್ಯಗಳಿಗೆ ತಕ್ಕಮಟ್ಟಿಗೆ ಇಲ್ಲ. ಆದ್ದರಿಂದ ಹೆಚ್ಚುವರಿ ಅನುದಾನ ಮಂಜೂರಿಗಾಗಿ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಲ್ಲಿ 5,598 ಮೋಟಾರೀಕೃತ ನಾಡದೋಣಿಗಳು, 2,017 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಹಾಗೂ 447 ಸಾಂಪ್ರದಾಯಿಕ ನಾಡದೋಣಿಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ಸಾಲಿನಲ್ಲಿ ಪಿಎಂಎಂಎಸ್ವೈ ಯೋಜನೆಯಡಿ ಪಚ್ಚಿಲೆ ಕೃಷಿ, ಮಸೆಲ್ಸ್, ಕಲ್ಲು, ಕ್ಲಾಮ್ಸ್, ಮುತ್ತು ಬೆಳವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಶೇಕಡಾ 100 ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗಾಗಿ ಜಿಲ್ಲೆಯ 6 ಫಲಾನುಭವಿಗಳಿಗೆ ಸುಮಾರು ₹200 ಲಕ್ಷ ಸಹಾಯಧನ ಮಂಜೂರಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಬಿ.ವಿ., ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಹಾಗೂ ಆಯ್ಕೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.







