ಉಡುಪಿ, ಫೆ.25: ಕಾರ್ಕಳ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ಉನ್ನತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾಬೀಸ್ತಾ ಬಾನು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ವೈದ್ಯಕೀಯ ಮಂಡಳಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಂಗಳವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಕುರಿತು ಮಾತನಾಡಿದರು.
ಹೆರಿಗೆಯ ನಂತರ ತಾಯಿ ಹಾಗೂ ನವಜಾತ ಶಿಶುವಿಗೆ ಅಗತ್ಯವಾದ ಎಲ್ಲ ಚಿಕಿತ್ಸೆಯನ್ನೂ ಕಡ್ಡಾಯವಾಗಿ ಒದಗಿಸಬೇಕು. ತಜ್ಞರ ಸಲಹೆ ಅಗತ್ಯವಿದ್ದಲ್ಲಿ ತಕ್ಷಣವೇ ರೆಫರಲ್ ನೀಡಿ ಸೂಕ್ತ ಚಿಕಿತ್ಸೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯ ಪ್ರತಿಯೊಬ್ಬ ಗರ್ಭಿಣಿಗೂ ತಾಯಿಕಾರ್ಡ್ ವಿತರಣೆ ಮಾಡಲಾಗಬೇಕು. ಗರ್ಭಾವಸ್ಥೆಯ ಅವಧಿಯಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ನಿಯಮಿತ ವೈದ್ಯಕೀಯ ತಪಾಸಣೆ ನಡೆಸುವುದು ಅವಶ್ಯಕ. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿ ತಮ್ಮ ತಮ್ಮ ಹಂತದಲ್ಲಿ ಸಭೆಗಳನ್ನು ನಡೆಸಿ ಗರ್ಭಿಣಿಯರು ಮತ್ತು ಶಿಶುಗಳಿಗೆ ಎಚ್ಚರಿಕೆಯಿಂದ ಚಿಕಿತ್ಸೆ ನೀಡುವಂತೆ ಸೂಚಿಸಬೇಕು. ಈ ಮೂಲಕ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ಗುರಿ ಹೊಂದಬೇಕು ಎಂದು ಹೇಳಿದರು.
ಜನರಲ್ಲಿ ಆರೋಗ್ಯ ಅರಿವು ಹೆಚ್ಚಿಸುವುದು ಮಹತ್ವದ್ದು. ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ ಮುಂಚಿತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯಕೀಯ ನೆರವು ಪಡೆಯುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.
ಸರಕಾರ ಜನಸಾಮಾನ್ಯರ ಆರೋಗ್ಯ ಭದ್ರತೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಲಸಿಕಾ ಕಾರ್ಯಕ್ರಮಕ್ಕೆ ಒತ್ತು
ಮಕ್ಕಳಿಗೆ ನೀಡಬೇಕಾದ ಎಲ್ಲಾ ರೋಗನಿರೋಧಕ ಲಸಿಕೆಗಳನ್ನು ಶೇ.100ರಷ್ಟು ನೀಡಬೇಕು. ಲಸಿಕೆಯಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ಕೈಗೊಳ್ಳಬೇಕು. ಹೊರಗುಳಿದ ಮಕ್ಕಳಿಗೆ ಮರು ದಿನಾಂಕ ನಿಗದಿ ಮಾಡಿ ಲಸಿಕೆ ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಜಂತುಹುಳು ನಿವಾರಣಾ ಮಾತ್ರೆಗಳ ವಿತರಣೆ ಶೇ.100ರಷ್ಟು ಸಾಧನೆಯಾಗಿದೆ ಎಂದು ತಿಳಿಸಿದರು.
ಮಾನಸಿಕ ಅಸ್ವಸ್ಥರ ಆರೈಕೆ
ರಸ್ತೆಗಳಲ್ಲಿ ಗುರುತಿಲ್ಲದೆ ಅಲೆದಾಡುತ್ತಿರುವ ಮಾನಸಿಕ ಅಸ್ವಸ್ಥರನ್ನು ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಬೇಕು. ನಂತರ ಅವರನ್ನು ಅವರ ಕುಟುಂಬದವರ ಬಳಿಗೆ ತಲುಪಿಸುವ ಕಾರ್ಯ ಸೇವಾಭಾವದಿಂದ ಮಾಡಬೇಕು. ಕೇಂದ್ರದ ಸಹಾಯವಾಣಿ ಸಂಖ್ಯೆ 7795978883 ಕುರಿತು ಸಾರ್ವಜನಿಕರಿಗೆ ವ್ಯಾಪಕ ಮಾಹಿತಿ ನೀಡುವಂತೆ ಸೂಚಿಸಿದರು.
ಕ್ಷಯರೋಗ ನಿರ್ಮೂಲನೆಗೆ ಕ್ರಮ
ಕ್ಷಯರೋಗ ಪತ್ತೆ ಪರೀಕ್ಷೆಗಳನ್ನು ವಿಸ್ತರಿಸಿ ರೋಗಿಗಳನ್ನು ಬೇಗ ಗುರುತಿಸಿ ಚಿಕಿತ್ಸೆ ನೀಡಬೇಕು. ಈ ವರ್ಷ ಜಿಲ್ಲೆಯಲ್ಲಿ 64 ಗ್ರಾಮ ಪಂಚಾಯಿತಿಗಳು ಕ್ಷಯರೋಗ ನಿರ್ಮೂಲನೆಗೆ ಉತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಗೋಲ್ಡ್, ಸಿಲ್ವರ್ ಮತ್ತು ಬ್ರಾಂಜ್ ಪದಕಗಳಿಗೆ ಆಯ್ಕೆಯಾಗಿವೆ ಎಂದು ತಿಳಿಸಿದರು.
ರಕ್ತದಾನ ಶಿಬಿರಗಳ ಅಗತ್ಯ
ಜಿಲ್ಲೆಯ ರಕ್ತನಿಧಿ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಪ್ರಮಾಣದ ರಕ್ತ ಸಂಗ್ರಹವಾಗಿದೆ. ಹೊರ ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಬೈಂದೂರು, ಕುಂದಾಪುರ ಹಾಗೂ ಉಡುಪಿಯ ತಾಯಿ-ಮಕ್ಕಳ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ ರಕ್ತನಿಧಿ ಘಟಕಗಳನ್ನು ಆರಂಭಿಸುವಂತೆ ಸೂಚಿಸಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ‘ನಮ್ಮ ಕ್ಲಿನಿಕ್’ಗಳಿಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಮಾರ್ಗಸೂಚಿ ಪ್ರಕಾರ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ತಜ್ಞ ವೈದ್ಯರು ಉಪಸ್ಥಿತರಿದ್ದರು.







