ಮಣಿಪಾಲ, ಫೆ. 26: ಜಿಲ್ಲೆಯಲ್ಲಿನ ಪ್ರತಿಯೊಬ್ಬ ಗರ್ಭಿಣಿಯಿಗೂ ತಾಯಿಕಾರ್ಡ್ ವಿತರಿಸುವುದನ್ನು ಖಚಿತಪಡಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ನಿರ್ದೇಶನ ನೀಡಿದರು. ತಾಯಿಕಾರ್ಡ್ ಮೂಲಕ ಗರ್ಭಿಣಿಯರಿಗೆ ಆರೋಗ್ಯ ಸಂಬಂಧಿತ ಮಾಹಿತಿ ನೀಡುವ ಜೊತೆಗೆ ನಿಯಮಿತ ವೈದ್ಯಕೀಯ ತಪಾಸಣೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಅವರು ತಿಳಿಸಿದರು.
ಮಂಗಳವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಅಗತ್ಯವಾದ ಚಿಕಿತ್ಸೆ ಹಾಗೂ ಆರೈಕೆ ಒದಗಿಸುವ ಮೂಲಕ ಜಿಲ್ಲೆಯ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ಗುರಿ ಸಾಧಿಸಬೇಕು ಎಂದು ಒತ್ತಿಹೇಳಿದರು.
ಹೆರಿಗೆ ನಂತರವೂ ತಾಯಿ ಮತ್ತು ಶಿಶುವಿನ ಆರೋಗ್ಯದ ಮೇಲೆ ನಿರಂತರ ನಿಗಾವಹಿಸಬೇಕು. ಹೆಚ್ಚಿನ ಚಿಕಿತ್ಸೆ ಅಥವಾ ತಜ್ಞ ವೈದ್ಯರ ಸಲಹೆ ಅಗತ್ಯವಿದ್ದಲ್ಲಿ ತಕ್ಷಣವೇ ಶಿಫಾರಸು ಮಾಡಿ ಸೂಕ್ತ ವೈದ್ಯಕೀಯ ಸೇವೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಮಕ್ಕಳಿಗೆ ನೀಡಲಾಗುವ ಎಲ್ಲಾ ಲಸಿಕೆಗಳನ್ನು ಸಮಯಕ್ಕೆ ಸರಿಯಾಗಿ ನೀಡುವುದು ಅತ್ಯಾವಶ್ಯಕ. ಒಂದು ಮಗು ಸಹ ಲಸಿಕೆಯಿಂದ ವಂಚಿತವಾಗಬಾರದು. ಲಸಿಕಾ ಕಾರ್ಯಕ್ರಮದಲ್ಲಿ ತಪ್ಪಿಸಿಕೊಂಡ ಮಕ್ಕಳಿಗೆ ಮರು ದಿನಾಂಕ ನಿಗದಿ ಮಾಡಿ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಬೇಕು ಎಂದು ಸೂಚಿಸಿದರು.
ರಸ್ತೆಗಳಲ್ಲಿ ಅಲೆದಾಡುತ್ತಿರುವ ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಅವರನ್ನು ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರಗಳಿಗೆ ಕೊಂಡೊಯ್ಯಬೇಕು. ಚಿಕಿತ್ಸೆ ನೀಡಿದ ಬಳಿಕ ಸಾಧ್ಯವಾದಲ್ಲಿ ಅವರ ಕುಟುಂಬಸ್ಥರೊಂದಿಗೆ ಸಂಪರ್ಕ ಸಾಧಿಸಿ ಮರುಸೇರಿಸುವ ಕಾರ್ಯ ಮಾನವೀಯತೆಯಿಂದ ನಡೆಯಬೇಕು ಎಂದು ಹೇಳಿದರು.
ಜಿಲ್ಲೆಯ ರಕ್ತನಿಧಿ ಕೇಂದ್ರಗಳಲ್ಲಿ ಅಗತ್ಯ ಪ್ರಮಾಣದ ರಕ್ತ ಸಂಗ್ರಹವಿದ್ದರೂ, ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಹೆಚ್ಚುತ್ತಿದೆ. ಆದ್ದರಿಂದ ಹೆಚ್ಚಿನ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಸಂಗ್ರಹ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಬೈಂದೂರು, ಕುಂದಾಪುರ ಹಾಗೂ ಉಡುಪಿಯ ತಾಯಿ-ಮಕ್ಕಳ ಆಸ್ಪತ್ರೆಗಳಲ್ಲಿ ರಕ್ತನಿಧಿ ಘಟಕಗಳನ್ನು ಶೀಘ್ರ ಆರಂಭಿಸುವಂತೆ ಸೂಚಿಸಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಮ್ಮ ಕ್ಲಿನಿಕ್ಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಸಂಬಂಧಿತ ನಗರ ಸ್ಥಳೀಯ ಸಂಸ್ಥೆಗಳು ಮಾರ್ಗಸೂಚಿಗಳಂತೆ ನಿಯಮಾನುಸಾರ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ವಿವಿಧ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು, ತಜ್ಞ ವೈದ್ಯರು ಹಾಗೂ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







