ಕಾರ್ಕಳ, ಮಾ. 3: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ರಾಜ್ಯಾದ್ಯಂತ ಆಕ್ಷೇಪಣೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಸಂಘಟನೆಗಳು ಒಂದೇ ವೇಳೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ 2026ರ ಕರಡು ನಿಯಮಾವಳಿಗಳ ಕುರಿತು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಿದವು. ಕಾರ್ಕಳದಲ್ಲಿ ಕಾರ್ಮಿಕ ನಿರೀಕ್ಷಕ ನವೀನ್ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಕಾರ್ಯದರ್ಶಿಗೆ (ವಿಕಾಸ ಸೌಧ) ಮನವಿ ಪತ್ರ ಸಲ್ಲಿಸಲಾಯಿತು.
ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (ರಿ) ಮತ್ತು ಲೆಮಿನಾ ಫೌಂಡ್ರಿಸ್ ಕಾರ್ಮಿಕರ ಸಂಘ (ರಿ)ಗಳ ಪ್ರತಿನಿಧಿಗಳು ಈ ಸಂದರ್ಭ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬೀಡಿ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಮುಖಂಡರಾದ ಜಯಂತಿ ಮತ್ತು ಶಕುಂತಲಾ, ಲೆಮಿನಾ ಫೌಂಡ್ರಿಸ್ ಕಾರ್ಮಿಕ ಸಂಘದ ಅಧ್ಯಕ್ಷ ಮೋಹನ್ ಚಂದ್ರ, ಪ್ರಧಾನ ಕಾರ್ಯದರ್ಶಿ ನಾಗೇಶ್ ಹಾಗೂ ಕಾರ್ಕಳ ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಪುಷ್ಪ ಮತ್ತು ನಾಗೇಶ್ ಉಪಸ್ಥಿತರಿದ್ದರು.







