ಉಡುಪಿ, ಮಾ. 05: ಮಲ್ಪೆ ಬಂದರಿನಲ್ಲಿ ಏಲಂ ಕಾರ್ಮಿಕನ ಮೇಲೆ ಬೋಟ್ ಮಾಲೀಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ (ಸಿಐಟಿಯು), ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಸಹಬಾಳ್ವೆ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಬುಧವಾರ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಚಿಂತಕ ಫಣಿರಾಜ್, “ಮಲ್ಪೆ ಬಂದರಿನಲ್ಲಿ ಕಾರ್ಮಿಕರನ್ನು ಜಾತಿ–ಮತದ ಆಧಾರದ ಮೇಲೆ ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಕಾರ್ಮಿಕರ ಮೇಲೆ ಫ್ಯಾಸಿಸ್ಟ್ ಮನೋಭಾವದ ದಬ್ಬಾಳಿಕೆ ನಡೆಯುತ್ತಿದೆ” ಎಂದು ಆರೋಪಿಸಿದರು.
“ಬಂದರಿನಲ್ಲಿ ಇಂತಹ ದೌರ್ಜನ್ಯಗಳು ನಡೆಯುತ್ತಿದ್ದರೂ ಪೊಲೀಸರು ಮೌನ ವಹಿಸಿರುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, “ಮಲ್ಪೆ ಬಂದರು ಎಲ್ಲ ಧರ್ಮ ಹಾಗೂ ಸಮುದಾಯದ ಜನರಿಗೆ ದುಡಿಯುವ ಅವಕಾಶ ಇರುವ ಸ್ಥಳ. ಆದರೆ ಅಲ್ಲಿನ ಕೆಲ ಬಲಿಷ್ಠ ಸಮುದಾಯದವರು ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಅಸ್ವೀಕಾರಾರ್ಹ” ಎಂದು ಹೇಳಿದರು.
ಸಹಬಾಳ್ವೆ ಉಡುಪಿ ಸಂಚಾಲಕ ಇದ್ರಿಸ್ ಹೂಡೆ ಮಾತನಾಡಿ, “ಮಲ್ಪೆ ಬಂದರು ದೇಶದ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿದೆ. ಇಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿದ್ದಾರೆ. ಜನರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ಬಂದರಿನಲ್ಲಿ ಪ್ರತಿಯೊಬ್ಬರಿಗೂ ಕೆಲಸ ಮಾಡುವ ಹಕ್ಕು ಇದೆ” ಎಂದು ಅಭಿಪ್ರಾಯಪಟ್ಟರು.
ಇತ್ತೀಚೆಗೆ ಏಲಂ ಕಾರ್ಮಿಕ ಶೇಕ್ ಆಯೂಬ್ ಮೇಲೆ ನಡೆದ ಹಲ್ಲೆಯನ್ನು ಅವರು ತೀವ್ರವಾಗಿ ಖಂಡಿಸಿದರು.
ಹಲ್ಲೆಗೆ ಒಳಗಾದ ಕಾರ್ಮಿಕ ಶೇಕ್ ಆಯೂಬ್ ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು. ಜೊತೆಗೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದಲ್ಲದೆ, ಸಂತ್ರಸ್ತ ಕಾರ್ಮಿಕನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು. ಮಲ್ಪೆ ಬಂದರಿನಲ್ಲಿ ಪೊಲೀಸ್ ಔಟ್ಪೋಸ್ಟ್ ಸ್ಥಾಪಿಸಿ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂಬುದಾಗಿ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್, ಸುರೇಶ್ ಕಲ್ಲಾಗರ, ಚಂದ್ರಶೇಖರ್ ದೇವಾಡಿಗ, ಮುಂಜುನಾಥ ಬಾಳೆಕುದ್ರು, ಶಶಿಧರ ಗೊಲ್ಲ, ಅಜೀಜ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.







