ಉಡುಪಿ, ಮಾ.06: ಕಳೆದ ಡಿಸೆಂಬರ್ 4ರಿಂದ 15ರವರೆಗೆ ರಂಗಭೂಮಿ ಉಡುಪಿ ಆಯೋಜಿಸಿದ್ದ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡದ ‘ಈದಿ’ ನಾಟಕಕ್ಕೆ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ರಂಗಭೂಮಿ ರಂಗೋತ್ಸವದ ಎರಡನೇ ದಿನ ಈ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು. ಈ ವೇಳೆ ಡಾ. ಟಿ.ಎಂ.ಎ. ಪೈ, ಎಸ್.ಎಲ್. ನಾರಾಯಣ ಭಟ್ ಹಾಗೂ ಮಲ್ಪೆ ಮಧ್ವರಾಜ್ ಸ್ಮಾರಕವಾಗಿ ನೀಡಲಾಗುವ 46ನೇ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯ ವಿವಿಧ ವಿಭಾಗಗಳ ಪ್ರಶಸ್ತಿಗಳನ್ನು ವಿಜೇತರಿಗೆ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಭೂಮಿ ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಂಗ ಶಿಕ್ಷಣ ಕಾರ್ಯಕ್ರಮವನ್ನು ಉಡುಪಿಯ 25 ಶಾಲೆಗಳಿಗೆ ವಿಸ್ತರಿಸುವ ಉದ್ದೇಶವಿದೆ. ಇದಕ್ಕಾಗಿ ವಿವಿಧ ಸಂಘ-ಸಂಸ್ಥೆಗಳ ಸಹಕಾರ ಹಾಗೂ ಪ್ರೋತ್ಸಾಹ ಅಗತ್ಯವಿದೆ ಎಂದು ಹೇಳಿದರು.
ಪ್ರಶಸ್ತಿ ವಿತರಿಸಿದ ಹಿರಿಯ ರಂಗಕರ್ಮಿ ಹಾಗೂ ನಿವೃತ್ತ ಪ್ರಾಂಶುಪಾಲ ನಟರಾಜ ದೀಕ್ಷಿತ್ ಮಾತನಾಡಿ, ಜೀವನದಲ್ಲಿ ನಾಟಕ ಮಾಡುವುದು ಮಾತ್ರವಲ್ಲ, ನಾಟಕದೊಳಗೆ ಜೀವನದ ಅರ್ಥವನ್ನು ಹುಡುಕುವ ಮನೋಭಾವ ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಂದಿಕೂರಿನ ಅದಾನಿ ಪವರ್ ಕಂಪನಿಯ ಮುಖ್ಯಸ್ಥ ಕಿಶೋರ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ., ರಂಗಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿದರು. ಪ್ರಭಾಕರ ಜಿ. ತುಮರಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಶೇರಿಗಾರ್ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ, ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಸುಮನಸಾ ಕೊಡವೂರು ತಂಡದ ‘ಈದಿ’ ನಾಟಕದ ಮರುಪ್ರದರ್ಶನ ನಡೆಯಿತು.







