ಉಡುಪಿ, ಮಾ.06:ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ವೈದ್ಯಾಧಿಕಾರಿಗಳು ಸೇರಿದಂತೆ ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ-ನೌಕರರು ಮಾರ್ಚ್ 11ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೆರಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ನಿಯೋಜಿತ ಅಧ್ಯಕ್ಷ ಡಾ. ನಿಕಿನ್ ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದರೂ ಯಾವುದೇ ಸ್ಪಷ್ಟ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆಯ ವಿವಿಧ ವೃಂದ ಸಂಘಟನೆಗಳ ಸಹಕಾರದಲ್ಲಿ ಮಾರ್ಚ್ 11ರಿಂದ ಪ್ರತಿಭಟನೆ ಆರಂಭವಾಗಲಿದೆ. ಮಾರ್ಚ್ 11ರಿಂದ 15ರವರೆಗೆ ರಾಜ್ಯದ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಡಿಸ್ಪೆನ್ಸರಿಗಳ ವೈದ್ಯರು ಹಾಗೂ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ.
ಈ ಅವಧಿಯಲ್ಲಿ ಹೊರರೋಗಿ ವಿಭಾಗ (ಒಪಿಡಿ) ಸೇವೆ ಸ್ಥಗಿತಗೊಳ್ಳಲಿದೆ. ಆದರೆ ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ತುರ್ತು ಅಗತ್ಯ ಸೇವೆಗಳನ್ನು ಮುಂದುವರಿಸಲಾಗುತ್ತದೆ. ಮಾರ್ಚ್ 15ರೊಳಗೆ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಮಾರ್ಚ್ 16ರಿಂದ ತುರ್ತು ಸೇವೆಗಳನ್ನೂ ನಿಲ್ಲಿಸಿ ವೈದ್ಯರು ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಮುಷ್ಕರವನ್ನು ತೀವ್ರಗೊಳಿಸಲಿದ್ದಾರೆ ಎಂದು ಡಾ. ನಿಕಿನ್ ಶೆಟ್ಟಿ ಎಚ್ಚರಿಸಿದರು.
ಈ ಬಾರಿ ಸರ್ಕಾರದ ಯಾವುದೇ ಎಚ್ಚರಿಕೆ ಅಥವಾ ಒತ್ತಡಗಳಿಗೆ ಮಣಿಯದೇ ಬೇಡಿಕೆ ಈಡೇರುವವರೆಗೂ ರಾಜ್ಯಾದ್ಯಂತ ಹೋರಾಟ ಮುಂದುವರಿಸುವುದಾಗಿ ಸಂಘದ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಅವರು ತಿಳಿಸಿದರು.
ಮುಷ್ಕರಕ್ಕೆ ಕಾರಣಗಳು:
ಆರೋಗ್ಯ ಇಲಾಖೆಯಲ್ಲಿ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ ಸಿಬ್ಬಂದಿ ಸಂಖ್ಯೆ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಇದರ ಪರಿಣಾಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನೌಕರರ ಮೇಲೆ ಹೆಚ್ಚಿನ ಕೆಲಸದ ಒತ್ತಡ ಉಂಟಾಗಿದೆ. ಜೊತೆಗೆ ಕಳೆದ ಐದು ವರ್ಷಗಳಿಂದ ಪದೋನ್ನತಿ ನೀಡದೇ ಇರುವುದನ್ನು ಅವರು ಆಕ್ಷೇಪಿಸಿದರು. ಡೇಟಾ ಲಭ್ಯವಿಲ್ಲ ಎಂಬ ಕಾರಣ ನೀಡಿ ಮುಂಬಡ್ತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದರು.
ವೃಂದ ಹಾಗೂ ನೇಮಕಾತಿ ನಿಯಮಗಳನ್ನು ಮೂರು ವರ್ಷಕ್ಕೊಮ್ಮೆ ಪರಿಷ್ಕರಿಸಬೇಕೆಂಬ ಸರ್ಕಾರದ ಆದೇಶವಿದ್ದರೂ 1973ರಿಂದ ಈವರೆಗೆ ತಿದ್ದುಪಡಿ ಮಾಡಲಾಗಿಲ್ಲ. ಅಲ್ಲದೆ ಎಲ್ಲಾ ವೃಂದಗಳ ಜ್ಯೇಷ್ಠತಾ ಪಟ್ಟಿಯನ್ನು ಕೂಡಲೇ ಪ್ರಕಟಿಸಿ ಬಾಕಿ ಇರುವ ಮುಂಬಡ್ತಿಗಳನ್ನು ನೀಡಬೇಕು. ಉನ್ನತ ಮತ್ತು ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಬೇಕೆಂಬುದೂ ಸಂಘದ ಪ್ರಮುಖ ಬೇಡಿಕೆಗಳಾಗಿವೆ ಎಂದು ಹೇಳಿದರು.
ಔಷಧಿಗಳ ಕೊರತೆ:
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಪ್ರಮಾಣದಲ್ಲಿ ಔಷಧ ಪೂರೈಕೆ ಆಗುತ್ತಿಲ್ಲ ಎಂದು ಡಾ. ನಿಕಿನ್ ಶೆಟ್ಟಿ ಆರೋಪಿಸಿದರು. ಇದರಿಂದ ವೈದ್ಯರ ಮೇಲೆ ಒತ್ತಡ ಹೆಚ್ಚಾಗುವುದಲ್ಲದೆ ಸಾರ್ವಜನಿಕರ ಆಕ್ರೋಶಕ್ಕೂ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. ಕೇಂದ್ರದಿಂದ ಪೂರೈಕೆ ಆಗದ ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಲು ಒತ್ತಡ ಬರುತ್ತಿದ್ದು, ಇದರಿಂದ ಹಲವು ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು.
ಇನ್ಸುಲಿನ್, ಆಂಟಿ ರೇಬಿಸ್ ವ್ಯಾಕ್ಸಿನ್, ಐವಿ ಫ್ಲೂಯಿಡ್ಸ್ ಹಾಗೂ ಆಂಟಿಬಯಾಟಿಕ್ಸ್ಗಳಂತಹ ಅಗತ್ಯ ಔಷಧಿಗಳ ಸಂಗ್ರಹವೂ ಕಡಿಮೆಯಾಗಿದೆ. ಸ್ಥಳೀಯ ನಿಧಿಗಳ ಮೂಲಕ ಔಷಧ ಖರೀದಿಸಲು ಸಾಕಷ್ಟು ಹಣವಿಲ್ಲದಿರುವುದರಿಂದ ವೈದ್ಯರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಹೇಳಿದರು. ಸ್ಥಳೀಯವಾಗಿ ಖರೀದಿಸುವ ಔಷಧಿಗಳ ಗುಣಮಟ್ಟದ ಖಾತರಿಯೂ ಇಲ್ಲದಿರುವುದು ಮತ್ತೊಂದು ಸಮಸ್ಯೆಯಾಗಿದೆ ಎಂದು ಅವರು ತಿಳಿಸಿದರು.
ಮಂಜೂರಾದ ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ವೈದ್ಯರು ಹಾಗೂ ನೌಕರರನ್ನು ಮೂರು ವರ್ಷಗಳ ಬಳಿಕ ಖಾಯಂಗೊಳಿಸುವ ಪದ್ಧತಿಯನ್ನು ಸ್ಥಗಿತಗೊಳಿಸಿರುವುದರಿಂದ ಅವರು ಸೇವಾ ಭದ್ರತೆ ಇಲ್ಲದೆ ಅನಿಶ್ಚಿತತೆಯಲ್ಲಿದ್ದಾರೆ. ಗುತ್ತಿಗೆ ವೈದ್ಯರು ಮತ್ತು ಎನ್ಎಚ್ಎಂ ಸಿಬ್ಬಂದಿಗೆ ಸೇವಾ ಭದ್ರತೆ ಹಾಗೂ ಕಾಲಕಾಲಕ್ಕೆ ವೇತನ ಹೆಚ್ಚಳ ನೀಡಬೇಕು ಎಂಬ ಬೇಡಿಕೆಯನ್ನೂ ಸರ್ಕಾರದ ಮುಂದಿಟ್ಟಿರುವುದಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಡಾ. ಸಂದೀಪ್ ಎ.ಎಸ್., ಕಾರ್ಯದರ್ಶಿ ಡಾ. ರಾಜೇಶ್ ಸಿ.ಎಸ್., ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ದಿನಕರ ಶೆಟ್ಟಿ, ಆರೋಗ್ಯ ಇಲಾಖೆ ಕೇಂದ್ರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಆನಂದ್ ಜತ್ತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.







