ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2026–27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮಂಡಿಸಿದ್ದಾರೆ. ತಮ್ಮ ರಾಜಕೀಯ ಜೀವನದ 17ನೇ ಬಜೆಟ್ ಅನ್ನು ಮಂಡಿಸಿರುವ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಈ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಯೋಜನೆಯಡಿ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೆರವು ನೀಡಲಾಗುತ್ತಿದ್ದು, ಇದರಿಂದ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ಸಿಗಲಿದೆ ಎಂದು ಸಿಎಂ ಹೇಳಿದರು.
ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಜೀವನಮಟ್ಟವನ್ನು ಸುಧಾರಿಸಲು ಸಹಾಯಕವಾಗಿವೆ ಎಂದು ಅವರು ಹೇಳಿದರು. ಇದರ ಜೊತೆಗೆ ರಸ್ತೆ, ಮೂಲಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಕ್ಷೇತ್ರದಲ್ಲೂ ಹಲವು ಮಹತ್ವದ ಘೋಷಣೆಗಳು ಮಾಡಲಾಗಿದೆ. ಬೆಂಗಳೂರಿನಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ವಿರುದ್ಧ ಲಸಿಕಾ ಕೇಂದ್ರವನ್ನು ಆರಂಭಿಸುವುದಾಗಿ ಪ್ರಕಟಿಸಲಾಗಿದೆ. ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಹಾಗೂ ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಯೋಜನೆಯನ್ನೂ ಘೋಷಿಸಲಾಗಿದೆ.
ಇದರೊಂದಿಗೆ ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ (ಕೋಲ್ಡ್ ಸ್ಟೋರೇಜ್) ನಿರ್ಮಾಣ ಘಟಕ ಸ್ಥಾಪಿಸುವ ಯೋಜನೆಯೂ ಬಜೆಟ್ನಲ್ಲಿ ಪ್ರಕಟವಾಗಿದೆ.
ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕವು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ತನ್ನ ಸ್ಥಾನವನ್ನು ಬಲಪಡಿಸುತ್ತಿದೆ ಎಂದು ಹೇಳಿದರು. ಜೊತೆಗೆ ರಾಜ್ಯಗಳ ಅಭಿವೃದ್ಧಿಗೆ ಒಕ್ಕೂಟ ಸರ್ಕಾರವು ಇನ್ನಷ್ಟು ಸಹಕಾರ ಮತ್ತು ಸಂವೇದನಾಶೀಲತೆ ತೋರಬೇಕು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ ಸೇವೆಗಳು, ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.







