ಬೆಂಗಳೂರು, ಮಾ. 07: ರಾಜ್ಯ ಸರ್ಕಾರವು ರೂಪಿಸುವ ಎಲ್ಲಾ ಕಾನೂನುಗಳನ್ನು ಕನ್ನಡ ಭಾಷೆಯಲ್ಲೇ ಸಿದ್ಧಪಡಿಸುವುದರ ಜೊತೆಗೆ, ಕೇಂದ್ರ ಸರ್ಕಾರ ಇದುವರೆಗೆ ಜಾರಿಗೆ ತಂದಿರುವ ಪ್ರಮುಖ ಕಾನೂನುಗಳನ್ನು ಕನ್ನಡಕ್ಕೆ ಅನುವಾದಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದೆ.
ಇದೇ ವೇಳೆ ನ್ಯಾಯಾಂಗ ವ್ಯವಸ್ಥೆಯ ಸುಧಾರಣೆಗೆ ಒತ್ತು ನೀಡಿರುವ ಸರ್ಕಾರ, ನ್ಯಾಯಾಲಯಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 175 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ತಿಳಿಸಿದೆ. ಈ ಅನುದಾನದಿಂದ ನ್ಯಾಯಾಲಯ ಕಟ್ಟಡಗಳ ನಿರ್ಮಾಣ ಹಾಗೂ ನ್ಯಾಯಾಧೀಶರಿಗಾಗಿ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತದೆ.
ಕಾಗದರಹಿತ, ದಕ್ಷ ಹಾಗೂ ನಾಗರಿಕ ಕೇಂದ್ರಿತ ನ್ಯಾಯಾಂಗ ವ್ಯವಸ್ಥೆಯನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ ‘ಇ-ಕೋರ್ಟ್’ಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ವೆಚ್ಚ ಮಾಡುವುದಾಗಿ ಸರ್ಕಾರ ಹೇಳಿದೆ.
ಇನ್ನೊಂದೆಡೆ, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೂ ಬಜೆಟ್ನಲ್ಲಿ ಪ್ರಸ್ತಾವಿಸಲಾಗಿದೆ.
ಅಡ್ವಕೇಟ್ ಜನರಲ್ ಕಚೇರಿಯಲ್ಲಿ ಗ್ರಂಥಾಲಯ ಹಾಗೂ ವೀಡಿಯೋ ಕಾನ್ಫರೆನ್ಸ್ (ವಿ.ಸಿ.) ಸೌಲಭ್ಯ ಕಲ್ಪಿಸುವುದರ ಜೊತೆಗೆ, ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕಚೇರಿಗಳಲ್ಲಿ CCMS ಮತ್ತು e-filing ವ್ಯವಸ್ಥೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸುಧಾರಿಸಲು 5 ಕೋಟಿ ರೂ. ಮೀಸಲಿಡಲಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಮಧ್ಯಸ್ಥಿಕೆ ವ್ಯವಸ್ಥೆಗೆ ಉತ್ತೇಜನ ನೀಡಲಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಹೊಂದಿರುವ ನ್ಯಾಯಾಧೀಶರು ಹಾಗೂ ವಕೀಲರಿಗೆ ವಿಶೇಷ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.







