ದಕ್ಷಿಣಕನ್ನಡ, ಮಾ. 07: ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಳ್ಳೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ಭಾರೀ ಸದ್ದು ಕೇಳಿಬಂದಿದ್ದು, ಸ್ಫೋಟ ಸಂಭವಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಡುಮದ್ದು ತಯಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳೀಯ ನಿವಾಸಿ ಅಬ್ದುಲ್ ಗಫೂರ್ ಎಂಬಾತನು ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಸುಡುಮದ್ದುಗಳನ್ನು ತಯಾರಿಸಿ ಸಂಗ್ರಹಿಸಿದ್ದಾನೆ ಎಂದು ತಿಳಿದುಬಂದಿದೆ. ಇದೇ ಸುಡುಮದ್ದುಗಳು ಆಕಸ್ಮಿಕವಾಗಿ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.







