ಮಂಗಳೂರು, ಮಾ. 07 : ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿರುವ ಅಪಾರ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂತಹ ನಿರೀಕ್ಷೆಗೂ ಮೀರಿದ ನಿರಾಸಾದಾಯಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಶೂನ್ಯವಾಗಿರುವ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಈ ಬಾರಿಯ ರಾಜ್ಯ ಬಜೆಟ್ ಕೇವಲ ಅಂಕಿ-ಅಂಶಗಳ ಆಟವಾಗಿದ್ದು, ಜನತೆಗೆ ಯಾವುದೇ ಸ್ಪಷ್ಟ ದಿಕ್ಕು ತೋರಿಸುವುದಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯದ ಒಟ್ಟು ಸಾಲವು 8.24 ಲಕ್ಷ ಕೋಟಿ ರೂಪಾಯಿಗೆ ಏರಿರುವುದು ಗಂಭೀರ ಚಿಂತೆಯ ವಿಷಯವಾಗಿದ್ದು, ಇದು ಸರ್ಕಾರದ ಆರ್ಥಿಕ ಶಿಸ್ತಿನ ಕೊರತೆಯನ್ನು ಬಯಲಿಗೆಳೆಯುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತ ಮಹತ್ವದ ಯೋಜನೆಗಳನ್ನು ಘೋಷಿಸದಿರುವುದು ಕೂಡ ವಿಷಾದಕರವೆಂದು ಹೇಳಿದ್ದಾರೆ.
ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಬಜೆಟ್ನಲ್ಲಿ ಒಳಗೊಂಡಿಲ್ಲವೆಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿಸಿದೆ ಎಂದು ಆರೋಪಿಸಿರುವ ಅವರು, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಬಡ ರೋಗಿಗಳಿಗೆ ಪ್ರಮುಖ ಆರೈಕೆ ಕೇಂದ್ರವಾಗಿರುವ ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲವೆಂದು ಹೇಳಿದ್ದಾರೆ.
ಇದಲ್ಲದೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೇವೆಗಳನ್ನು ಮೇಲ್ದರ್ಜೆಗೆತ್ತಲು ಕೇವಲ 45 ಕೋಟಿ ರೂ. ಅನುದಾನವನ್ನು ಮಾತ್ರ ಮೀಸಲಿಟ್ಟಿರುವುದು ಅಸಮರ್ಪಕ ಕ್ರಮ ಎಂದು ಅವರು ಟೀಕಿಸಿದ್ದಾರೆ.
ಪ್ರತಿ ವರ್ಷವೂ ಕರಾವಳಿ ಭಾಗದಲ್ಲಿ ಉಲ್ಬಣಗೊಳ್ಳುತ್ತಿರುವ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವಂತಹ ಯಾವುದೇ ಗಂಭೀರ ಕ್ರಮಗಳನ್ನು ಈ ಬಜೆಟ್ನಲ್ಲಿ ಘೋಷಿಸಿಲ್ಲ. ಜೊತೆಗೆ ಕರಾವಳಿ ಪ್ರವಾಸೋದ್ಯಮದ ಅಪಾರ ಸಾಧ್ಯತೆಗಳನ್ನು ಬಳಸಿಕೊಳ್ಳಲು ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳೂ ಈ ಬಜೆಟ್ನಲ್ಲಿ ಕಾಣಿಸದಿರುವುದು ನಿರಾಶೆ ತಂದಿದೆ ಎಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.







