ಉಡುಪಿ, ಮಾ. 10: ಬಹರೇನ್, ಕತಾರ್, ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಮನವಿಯನ್ನು ಪರಿಗಣಿಸಿ, ಯುದ್ಧಪೀಡಿತ ಪ್ರದೇಶಗಳಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ತರಿಸುವ ಕುರಿತು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಡಾ. ಸಿ.ಎನ್. ಮಂಜುನಾಥ್ ಅವರು ಸಂಸತ್ ಭವನದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ವೇಳೆ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆ ಕುರಿತು ಸಚಿವರು ಮಾಹಿತಿ ನೀಡಿದರು. ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ 49 ವಿಮಾನಗಳು ಆಗಮಿಸಿದ್ದು, ಸುಮಾರು 67 ಸಾವಿರ ಮಂದಿ ಭಾರತೀಯರು ವಾಪಾಸಾಗಿದ್ದಾರೆ. ಇನ್ನೂ ಸಂಕಷ್ಟದಲ್ಲಿರುವವರನ್ನು ಹಂತ ಹಂತವಾಗಿ ಭಾರತಕ್ಕೆ ಕರೆತರಲು ಸರ್ಕಾರ ಕ್ರಮ ಮುಂದುವರೆಸುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ







