ಮಂಗಳೂರು, ಮಾರ್ಚ್ 12: ಹೋಟೆಲ್, ಕ್ಯಾಂಟೀನ್ ಹಾಗೂ ಕಫೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪ್ಲಾಸ್ಟಿಕ್ ಕವರ್ ಅಥವಾ ಪತ್ರಿಕೆಗಳಲ್ಲಿ ಪಾರ್ಸೆಲ್ ಮಾಡುವುದನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ಲಾಸ್ಟಿಕ್ನಲ್ಲಿ ಇರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರದಲ್ಲಿ ಬೆರೆತು ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಹೋಟೆಲ್ ಹಾಗೂ ಕ್ಯಾಂಟೀನ್ಗಳಿಂದ ಕಾರ್ಮಿಕರು ಮತ್ತು ಆಸ್ಪತ್ರೆಯ ರೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಸಿ ಆಹಾರ ಸಾಗಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್ ಹಾಗೂ ಪತ್ರಿಕೆಗಳಲ್ಲಿ ಪಾರ್ಸೆಲ್ ಮಾಡುವ ಪದ್ಧತಿಯನ್ನು ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಹಾಗೂ ತಂಬಾಕು ಸೇವನೆ ನಿಷೇಧಿಸಿರುವುದರಿಂದ, ಎಚ್ಚರಿಕೆ ಫಲಕಗಳನ್ನು ಅಳವಡಿಸದೇ ಇರುವವರು ಹಾಗೂ ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್ ಅಥವಾ ಬೆಂಕಿಪೊಟ್ಟಣಗಳನ್ನು ಇರಿಸುವವರಿಗೆ ದಂಡ ವಿಧಿಸಬೇಕು ಎಂದು ಹೇಳಿದರು.
ತಂಬಾಕು ಬ್ರಾಂಡ್ ಹೆಸರಿನ ಜಾಹೀರಾತು ಫಲಕಗಳು ಅಥವಾ ಯಾವುದೇ ರೀತಿಯ ಪ್ರಚಾರ ನಡೆಸುವುದು, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡುವುದು, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಪ್ರದರ್ಶನ ಮಾಡುವುದು ಕಾನೂನುಬಾಹಿರವಾಗಿದ್ದು, ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಶಾಲೆ ಹಾಗೂ ಕಾಲೇಜುಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವವರ ಮೇಲೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಠಾಣೆಗೆ ಸಲ್ಲಿಸುವಂತೆ ಅವರು ಸೂಚಿಸಿದರು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಬಳಕೆ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.
ಶಾಲೆ ಮತ್ತು ಕಾಲೇಜುಗಳ ಬಳಿ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ತಂಬಾಕು ಸಂಬಂಧಿತ ಜಾಹೀರಾತು ಫಲಕಗಳು ಕಂಡುಬಂದಿರುವುದರಿಂದ, ತಂಬಾಕು ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು ಮತ್ತು ಪೌರ ಕಾರ್ಮಿಕರು ತಂಬಾಕಿನ ಅಪಾಯಕ್ಕೆ ಹೆಚ್ಚು ಒಳಗಾಗುವ ಕಾರಣ, ಅವರ ಕೆಲಸದ ಸ್ಥಳಗಳಿಗೆ ತೆರಳಿ ತಂಬಾಕು ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಿರುವವರಿಗೂ ಹಾಗೂ ಗುಟ್ಕಾ ಜಗಿದು ಉಗುಳುವವರಿಗೂ 1000 ರೂ.ವರೆಗೆ ದಂಡ ವಿಧಿಸುವ ವ್ಯವಸ್ಥೆ ಇದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟವೂ ನಿಷೇಧವಾಗಿದ್ದು, ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ ಒಟ್ಟು 2,587 ಪ್ರಕರಣಗಳು ದಾಖಲಾಗಿದ್ದು, ರೂ.3.89 ಲಕ್ಷ ದಂಡ ವಸೂಲಿ ಮಾಡಲಾಗಿದೆ. ತಂಬಾಕು ಸಂಬಂಧಿತ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಇದ್ದರೆ ಅಥವಾ ಹಳೆಯ ಚಿತ್ರಗಳನ್ನು ಬಳಸಿದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಉಪಸ್ಥಿತರಿದ್ದರು.







