ಉಡುಪಿ:ಮಾರ್ಚ್ 13 :ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಸಮೀಪ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ.
ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಸಾಲ್ಮರದ ಕ್ಯಾಟರಿಂಗ್ ಸೆಡ್ ಸಮೀಪದ ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತ ಗೌತಮ್ ಪೂಜಾರಿ ಕ್ಯಾಟರಿಂಗ್ ಕ್ಷೇತ್ರದಲ್ಲಿ ಮುಖ್ಯ ಅಡುಗೆಗಾರನಾಗಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ಈ ಕೃತ್ಯ ಎಸಗಿರುವುದು ತಿಳಿದುಬಂದಿದ್ದು, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಅವಿವಾಹಿತನಾಗಿದ್ದ ಗೌತಮ್ ಎಲ್ಲರೊಂದಿಗೂ ಸ್ನೇಹಪರವಾಗಿ ಬೆರೆತು ನಡೆಯುವ ವ್ಯಕ್ತಿಯಾಗಿದ್ದು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದನೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.






