ಉಡುಪಿ, ಮಾ. 14: ಪ್ರಸ್ತುತ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಪೂರೈಕೆ ಕುಂಠಿತವಾಗಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು ನಡೆಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಗ್ಯಾಸ್ ಸಿಲಿಂಡರ್ಗಳ ಕೊರತೆ ಮುಂದುವರಿದಲ್ಲಿ ಜಿಲ್ಲೆಯಾದ್ಯಂತ ಅನೇಕ ಹೋಟೆಲ್ಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ತಮ್ಮ ದಿನನಿತ್ಯದ ಊಟ ಹಾಗೂ ಉಪಹಾರಕ್ಕಾಗಿ ಹೋಟೆಲ್ಗಳನ್ನು ಅವಲಂಬಿಸಿಕೊಂಡಿದ್ದಾರೆ. ಹೋಟೆಲ್ಗಳು ಮುಚ್ಚಿದರೆ ಇವರಿಗೆ ಆಹಾರದ ವ್ಯವಸ್ಥೆ ದೊಡ್ಡ ಸಮಸ್ಯೆಯಾಗಲಿದೆ ಎಂದು ಹೇಳಲಾಗಿದೆ.
ಇನ್ನು ಉಡುಪಿ ಜಿಲ್ಲೆ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಇಲ್ಲಿ ಆಗಮಿಸುತ್ತಾರೆ. ಹೋಟೆಲ್ಗಳು ಕಾರ್ಯನಿರ್ವಹಿಸದಿದ್ದರೆ ಪ್ರವಾಸಿಗರ ಊಟೋಪಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬಿದ್ದು ಪ್ರವಾಸೋದ್ಯಮಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ.
ಹೋಟೆಲ್ ಕ್ಷೇತ್ರದ ಮೇಲೆ ಅವಲಂಬಿಸಿಕೊಂಡಿರುವ ಸಾವಿರಾರು ಕಾರ್ಮಿಕರು, ಜೊತೆಗೆ ಸ್ವಿಗ್ಗಿ ಹಾಗೂ ಜೋಮ್ಯಾಟೋ ಮುಂತಾದ ಡೆಲಿವರಿ ಸೇವೆಗಳಲ್ಲಿ ಕೆಲಸ ಮಾಡುವವರು ಉದ್ಯೋಗ ಕಳೆದುಕೊಳ್ಳುವ ಆತಂಕವೂ ಎದುರಾಗಿದೆ. ಇದಲ್ಲದೆ ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ಹಣ್ಣು-ತರಕಾರಿ, ದಿನಸಿ ವ್ಯಾಪಾರಿಗಳು ಸೇರಿದಂತೆ ಅನೇಕ ಸಣ್ಣ ವ್ಯಾಪಾರಸ್ಥರ ಜೀವನೋಪಾಯಕ್ಕೂ ದೊಡ್ಡ ಹೊಡೆತ ಬೀಳಲಿದೆ ಎಂದು ತಿಳಿಸಲಾಗಿದೆ.
ಒಟ್ಟಾರೆ ಈ ಸಮಸ್ಯೆಯಿಂದ ಜಿಲ್ಲೆಯ ಜನಜೀವನವೇ ಅಸ್ತವ್ಯಸ್ತವಾಗುವ ಸಾಧ್ಯತೆ ಇರುವುದರಿಂದ, ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯನ್ನು ಶೀಘ್ರ ಪುನಃಸ್ಥಾಪಿಸಬೇಕೆಂದು ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ.







