ಉಡುಪಿ, ಮಾ.14: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಹೋಟೆಲ್ ಉದ್ಯಮಿಗಳು ಸಂಕಷ್ಟ ಎದುರಿಸುತ್ತಿದ್ದು, ಪರ್ಯಾಯವಾಗಿ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸಲಹೆ ನೀಡಿದ್ದಾರೆ.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ತೊಂದರೆ ಇಲ್ಲ. ಆದರೆ ವಾಣಿಜ್ಯ ಬಳಕೆಯ ಅನಿಲವನ್ನು ಹೆಚ್ಚಿನ ಪ್ರಮಾಣದಲ್ಲಿ ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದ್ದು, ಯುದ್ಧದ ಪರಿಣಾಮದಿಂದ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆಯಾಗಿದ್ದು, ಪರ್ಯಾಯ ಇಂಧನ ಬಳಕೆಯೇ ಪ್ರಸ್ತುತ ಪರಿಹಾರ ಮಾರ್ಗ ಎಂದು ಅವರು ಹೇಳಿದರು.
ಜಿಲ್ಲೆಯ ಕೆಲ ಹೋಟೆಲ್ಗಳು ಈಗಾಗಲೇ ಕಟ್ಟಿಗೆ ಸೇರಿದಂತೆ ಇತರೆ ಉರುವಲುಗಳನ್ನು ಬಳಸಿ ಆಹಾರ ತಯಾರಿಕೆ ನಡೆಸುತ್ತಿವೆ. ಜಿಲ್ಲೆಯ ಎಲ್ಲಾ ಹೋಟೆಲ್ಗಳು ಇದೇ ಕ್ರಮ ಅನುಸರಿಸುವ ಮೂಲಕ ಉದ್ಯಮ ಮುಂದುವರೆಸುವುದರ ಜೊತೆಗೆ ಕಾರ್ಮಿಕರ ಉದ್ಯೋಗವನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಸುಮಾರು 25,000 ರಿಂದ 30,000ಕ್ಕೂ ಹೆಚ್ಚು ಮಂದಿ ಹೋಟೆಲ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಲ್ಲಿ ಬಹುತೇಕರು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬಂದವರಾಗಿದ್ದು, ಉದ್ಯಮ ಸ್ಥಗಿತಗೊಂಡರೆ ಅವರು ಬೇರೆ ಉದ್ಯೋಗ ಹುಡುಕುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಹೋಟೆಲ್ಗಳಿಗೆ ಕಾರ್ಮಿಕರ ಕೊರತೆ ಉಂಟಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ಸಾಮಿಲ್ಗಳು ಕಾರ್ಯನಿರ್ವಹಿಸುತ್ತಿದ್ದು, ಹೋಟೆಲ್ ಉದ್ಯಮಕ್ಕೆ ಅಗತ್ಯ ಕಟ್ಟಿಗೆ ಲಭ್ಯವಾಗುವಂತೆ ಸಹಕಾರ ನೀಡಬೇಕು. ಜೊತೆಗೆ ಹೋಟೆಲ್ ಉದ್ಯಮಿಗಳು ವಿದ್ಯುತ್ ಸ್ಟವ್ ಬಳಕೆಗೆ ಮುಂದಾದರೆ ಅಗತ್ಯ ನೆರವು ನೀಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರವೀಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.







