ಮಂಗಳೂರು, ಮಾ. 17: ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಮೂವರು ಮಹಿಳೆಯರು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ಬೆಂಗಳೂರಿನಲ್ಲಿ ದೂರು ಸಲ್ಲಿಸಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.
ಎರಡು ವರ್ಷಗಳ ಹಿಂದಿನ ಘಟನೆ ಆರೋಪ:
ಒಬ್ಬ ಮಹಿಳೆಯ ದೂರಿನ ಪ್ರಕಾರ, ಎರಡು ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣದಲ್ಲಿ ಅವರ ಗಂಡನನ್ನು ಬಂಧಿಸಲಾಗಿತ್ತು. ಆತನನ್ನು ಬಿಡುಗಡೆಗೊಳಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್ಸ್ಪೆಕ್ಟರ್ ಒತ್ತಾಯಿಸಿದ್ದರೊಂದಿಗೆ 25 ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ಗಂಡನ ವಿರುದ್ಧ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಹಾಕಿದ್ದರನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾತ್ರಿ ವೇಳೆ ಮನೆ ಕಾಂಪೌಂಡ್ ಹಾರಿ ಒಳನುಗ್ಗುವುದು, ಕೈ ಹಿಡಿದು ಡ್ಯಾನ್ಸ್ ಮಾಡಲು ಒತ್ತಾಯಿಸುವುದು ಸೇರಿದಂತೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಮಯದಲ್ಲಿಯೂ ಇದೇ ರೀತಿಯ ವರ್ತನೆ ತೋರಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ. ಪಾಸ್ಪೋರ್ಟ್ ಪರಿಶೀಲನೆ ಸೇರಿದಂತೆ ವಿವಿಧ ಕೆಲಸಗಳಿಗೆ ಠಾಣೆಗೆ ಬರುವ ಮಹಿಳೆಯರ ಮೇಲೆಯೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಹಲವರು ದೂರು ನೀಡಲು ಹಿಂಜರಿದಿದ್ದಾರೆ ಎಂದು ತಿಳಿಸಲಾಗಿದೆ.
ವಿಶೇಷ ತನಿಖೆಗೆ ಒತ್ತಾಯ:
ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಮಹಿಳೆಯರು ತಿಳಿಸಿದ್ದಾರೆ. ಹೀಗಾಗಿ ಮಂಗಳೂರು ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಅನುಮಾನವಿರುವುದರಿಂದ ವಿಶೇಷ ತನಿಖಾ ತಂಡ (SIT) ರಚಿಸಿ ಅಥವಾ ಸಿಐಡಿ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ತನಿಖೆ ನಡೆಯುವವರೆಗೆ ಸಂಬಂಧಿತ ಅಧಿಕಾರಿಯನ್ನು ಕರ್ತವ್ಯದಿಂದ ದೂರವಿಡಬೇಕೆಂದು ಸಹ ಒತ್ತಾಯಿಸಿದ್ದಾರೆ.
ಇಲಾಖಾ ತನಿಖೆ ಆರಂಭ:
ಇನ್ಸ್ಪೆಕ್ಟರ್ ವಿರುದ್ಧ ಬಂದಿರುವ ದೂರುಗಳ ಆಧಾರದಲ್ಲಿ ಇಲಾಖಾ ಮಟ್ಟದ ತನಿಖೆ ಆರಂಭಿಸಲಾಗಿದೆ. ಉತ್ತರ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಮಿಥುನ್ ತಿಳಿಸಿದ್ದಾರೆ.
ಮಹಿಳಾ ಆಯೋಗದ ಸೂಚನೆ:
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಮಹಿಳೆಯರ ರಕ್ಷಣೆಗೆ ಮುಂದಾಗಬೇಕಾದ ಸರಕಾರಿ ಅಧಿಕಾರಿಯ ದುರ್ವ್ಯವಹಾರ ಮತ್ತು ಕರ್ತವ್ಯ ಲೋಪವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ನಿಯಮಾನುಸಾರ ವಿಚಾರಣೆ ನಡೆಸಿ ಅಗತ್ಯ ಶಿಸ್ತು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದೆ.







