ಮಂಗಳೂರು, ಮಾ. 19: ತಾಲೂಕಿನ ಕಸಬ ಬೆಂಗ್ರೆ ಪ್ರದೇಶದಲ್ಲಿರುವ ಶೆಡ್ ಒಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪಣಂಬೂರು ಪೊಲೀಸರು ಬುಧವಾರ ದಾಳಿ ನಡೆಸಿದರು.
ದಾಳಿಯ ವೇಳೆ ವಧೆಗೆ ಕಟ್ಟಿಹಾಕಿದ್ದ 9 ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಈಗಾಗಲೇ ವಧೆ ಮಾಡಿ ಮಾರಾಟಕ್ಕೆ ಸಿದ್ಧಪಡಿಸಿದ್ದ ಸುಮಾರು 205 ಕೆ.ಜಿ. ಮಾಂಸ ಹಾಗೂ ವಧೆಗೆ ಬಳಸುತ್ತಿದ್ದ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಸಬ ಬೆಂಗ್ರೆ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿ ಸಮೀಪ, ಅಹಮ್ಮದ್ ಅವರ ಮನೆಯ ಹಿಂಭಾಗದಲ್ಲಿ ಫಲ್ಗುಣಿ ನದಿಯ ತೀರದಲ್ಲಿ ನಿರ್ಮಿಸಲಾಗಿದ್ದ ಶೆಡ್ನಲ್ಲಿ 4ರಿಂದ 5 ಮಂದಿ ಸೇರಿ ಅಕ್ರಮ ವಧೆ ನಡೆಸುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸಬ ಬೆಂಗ್ರೆಯ ಕಬೀರ್ ಅಲಿಯಾಸ್ ಪೆತ್ತ ಕಬೀರ್, ಜೋಕಟ್ಟೆ ನಿವಾಸಿ ಬದ್ರು ಅಲಿಯಾಸ್ ಬದ್ರುದ್ದೀನ್ ಸೇರಿದಂತೆ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಣಂಬೂರು ಎಸಿಪಿ ಶ್ರೀಕಾಂತ್ ಹಾಗೂ ಪಿಐ ಸಲೀಂ ಅಬ್ಬಾಸ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಶ್ರೀಕಲಾ ಮತ್ತು ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದರು. ಪ್ರಕರಣವನ್ನು ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.







