ಉಡುಪಿ: ಉಡುಪಿ ನಗರಸಭೆ ಸಭಾಂಗಣದಲ್ಲಿ ನಗರಸಭೆಯ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಳೆಗಾಲದ ಪೂರ್ವ ಸಿದ್ಧತೆಗಳ ಕುರಿತ ಸಭೆ ನಡೆಯಿತು.
ಈ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ ಮಹತ್ವದ ಸೂಚನೆಗಳನ್ನು ನೀಡಿದರು.
ನಗರದಾದ್ಯಂತ ನಿರಂತರ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು. ಕೃತಕ ನೆರೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ರಾಜ ಕಾಲುವೆಗಳ ಹೂಳು ತೆರವು ಕಾರ್ಯಗಳನ್ನು ತ್ವರಿತಗೊಳಿಸಲು ಹಾಗೂ ಅಪಾಯಕಾರಿ ಮರಗಳ ಗೆಲ್ಲುಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆಗಾಲ ಆರಂಭಕ್ಕೂ ಮುನ್ನ ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಶೇಷ ಗಮನ ಹರಿಸುವಂತೆ ಸೂಚಿಸಿದರು.
ಇದೇ ವೇಳೆ, ಉಡುಪಿ–ಗುಂಡಿಬೈಲು–ಪೆರಂಪಳ್ಳಿ–ಮಣಿಪಾಲ ಮಾರ್ಗದಲ್ಲಿ ಪರ್ಮಿಟ್ ಹೊಂದಿರುವ ಖಾಸಗಿ ಬಸ್ಸುಗಳು ಸಂಚಾರ ಮಾಡದಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳನ್ನು ಪ್ರಸ್ತಾಪಿಸಿದ ಅವರು, ತಕ್ಷಣ ಬಸ್ಸುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿರುವ ಮಾರ್ಗಗಳಲ್ಲಿ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.






