ಉಡುಪಿ : ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ಶ್ರೇಯಸ್ ಆಚಾರ್ ಎಂದು ಗುರುತಿಸಲಾಗಿದೆ. ಇವರು ಚಾಲನೆ ಮಾಡುತ್ತಿದ್ದ ಕಿಯಾ ಕಾರು, ಮುಂದೆ ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಮಾಹಿತಿಯ ಪ್ರಕಾರ, ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು ಸಾಗಣೆ ಮಾಡುತ್ತಿದ್ದ ಲಾರಿ ಚಾಲಕ ಮಂಜುನಾಥ ಗೌಡ ಅವರು ಕೋಕ್ ಲೋಡ್ ಮಾಡಿಕೊಂಡು ಕೊಪ್ಪಳದ ಗಿಣಿಗೇರಿಯತ್ತ ಪ್ರಯಾಣಿಸುತ್ತಿದ್ದರು. ಪಾಂಗಳದ ವಿದ್ಯಾವರ್ಧಕ ಶಾಲೆಯ ಎದುರು ಏಕಮುಖ ಸಂಚಾರ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಡಿಕ್ಕಿ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಶ್ರೇಯಸ್ ಆಚಾರ್ ಅವರು ವಾಹನದಲ್ಲೇ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರನ್ನು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ.
ಇನ್ನೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಾರ್ವಿನ್ ಹಾಗೂ ಸೂರ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.







