ಧಾರವಾಡ, ಏಪ್ರಿಲ್ 17:ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ನಿನ್ನೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದ್ದ ಕೋರ್ಟ್, ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ಪ್ರಕರಣದಲ್ಲಿ ಒಟ್ಟು 21 ಮಂದಿ ಆರೋಪಿಗಳಿದ್ದು, ಇವರ ಪೈಕಿ 19 ಮಂದಿಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.
ಇದಲ್ಲದೆ, 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಎ1 ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ಕೋರ್ಟ್ ಪರಿಗಣಿಸಿದೆ.
ಹತ್ಯೆಗೀಡಾದ ಯೋಗೇಶ್ ಗೌಡ ಅವರ ಕುಟುಂಬಕ್ಕೆ 16 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಶಾಸಕ ವಿನಯ್ ಕುಲಕರ್ಣಿ ಅವರ ಸ್ಥಾನಕ್ಕೂ ಸಂಕಷ್ಟ ಎದುರಾಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆ ಇದೆ.






