ಉಡುಪಿ: ಜಿಲ್ಲೆಯ ಆರೋಗ್ಯ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವ ಮಹತ್ವದ ಯೋಜನೆಗಳಿಗೆ ಇಂದು ಉಡುಪಿ ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು .
ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್-ಒಎನ್ಜಿಸಿ) ಸಂಸ್ಥೆಯು ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಯಡಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಕೊಡುಗೆಯಾಗಿ ನೀಡಿರುವ ನೂತನ ಸುಸಜ್ಜಿತ ವಾಹನವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ‘ಸಂಜೀವಿನಿ’ (KSRLPS) ಸಂಸ್ಥೆಯ ಸಹಯೋಗದಲ್ಲಿ ಸಮಗ್ರ ಕೃಷಿ ಸಮೂಹಗಳಡಿ ಸ್ಥಾಪಿಸಲಾದ ನೂತನ ‘ಜೀವನೋಪಾಯ ಸೇವಾ ಕೇಂದ್ರ’ (LSC)ಕ್ಕೂ ಚಾಲನೆ ನೀಡಲಾಯಿತು. ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಟ್ರ್ಯಾಕ್ಟರ್ ಹಾಗೂ ಸರಕು ಸಾಗಾಣಿಕೆಗಾಗಿ ಟಾಟಾ ಏಸ್ ವಾಹನವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.
ಉಡುಪಿ ತಾಲೂಕಿನ ಅಲೆವೂರಿನ ‘ಸಮೃದ್ಧಿ ಸಂಜೀವಿನಿ ಗ್ರಾಮೀಣ ಪಂಚಾಯತ್ ಮಟ್ಟದ ಒಕ್ಕೂಟ’ದ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸಲಿರುವ ಈ ಕೇಂದ್ರವು, ಸ್ಥಳೀಯ ರೈತರಿಗೆ ರಿಯಾಯಿತಿ ದರದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸಲಿದೆ.
ಜಿಲ್ಲೆಯ ಜನರ ಆರೋಗ್ಯ ಸೇವೆ ಬಲಪಡಿಸುವುದರ ಜೊತೆಗೆ ರೈತರ ಆರ್ಥಿಕ ಸಬಲೀಕರಣಕ್ಕೂ ಈ ಯೋಜನೆಗಳು ಸಹಕಾರಿಯಾಗಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.







