ಉಡುಪಿ:ಮೇ 29:ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ಪಾಸ್ ಸರ್ವಿಸ್ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಶಿರೂರು ಗ್ರಾಮದ ಪಂಜು ಪೂಜಾರಿ (45) ಅವರು ಮೇ 27ರಂದು ರಾತ್ರಿ ಸುಮಾರು 10:15 ಗಂಟೆಗೆ ಬೈಕ್ ನಲ್ಲಿ ಶಿರೂರು ಕಡೆಯಿಂದ ಮಡಿಕಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಉಪ್ಪುಂದದ ಎನ್ಎಚ್-66 ಅಂಡರ್ಪಾಸ್ನ ಸರ್ವಿಸ್ ರಸ್ತೆಯಲ್ಲಿ ನಾಯ್ಕನಕಟ್ಟೆ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಬೈಕ್ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಡಿಕ್ಕಿಯ ಪರಿಣಾಮ ಪಂಜು ಪೂಜಾರಿ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಎಡ ಕಾಲಿನ ಕೋಲು ಭಾಗಕ್ಕೆ ತೀವ್ರ ಗಾಯವಾಗಿದ್ದು, ಎಡ ಪಕ್ಕಲು ಭಾಗಕ್ಕೂ ಒಳಜಖಂ ಆಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕುಂದಾಪುರದ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.







