ಉಡುಪಿ : ಜೂನ್ 02:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಗ್ರಾಮದ ಚೋಳಬೆಟ್ಟು ನಿವಾಸಿ ರಾಮಪ್ಪ ನಾಯಕ್ (59) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರು ಕೂಲಿ ಕೆಲಸ ಮಾಡಿಕೊಂಡಿದ್ದು, ಕಳೆದ ಸುಮಾರು 10 ವರ್ಷಗಳಿಂದ ಉಬ್ಬಸದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ, ಎರಡು ವರ್ಷಗಳ ಹಿಂದೆ ಮನೆಯ ಸಮೀಪ ಬಿದ್ದು ಕಾಲಿನ ನೋವಿನಿಂದಲೂ ತೊಂದರೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಜೂನ್ 2ರಂದು ಮುಂಜಾನೆ 4 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಮೃತರ ಪುತ್ರ ಗುರುದಾಸ್ (30) ಅವರು ನೀಡಿದ ಮಾಹಿತಿಯಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿದ್ದರೆ, ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ.






