ಬ್ರಹ್ಮಾವರ: ಬಿಲ್ಲವ (ಪೂಜಾರಿ) ಸಮಾಜದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ಹೇಳಿಕೆಗಳನ್ನು ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಅನಿತಾ ಕಾಸರಗೋಡು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಾವರ ವತಿಯಿಂದ ಬ್ರಹ್ಮಾವರ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಲಾಯಿತು.
ದೂರಿನಲ್ಲಿ, ಅನಿತಾ ಕಾಸರಗೋಡು ಅವರು ಯೂಟ್ಯೂಬ್, ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಬಿಲ್ಲವ (ಪೂಜಾರಿ) ಸಮುದಾಯದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಜಾತಿ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ತುಳು ಭಾಷೆಯಲ್ಲಿ ನೀಡಿರುವ ಕೆಲವು ಹೇಳಿಕೆಗಳ ಮೂಲಕ ಇಡೀ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದು, ಇದರಿಂದ ಸಮಾಜದ ಲಕ್ಷಾಂತರ ಜನರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಲ್ಲವ ಸಮಾಜವು ಬ್ರಹ್ಮಶ್ರೀ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಮನುಷ್ಯನಿಗೆ” ಎಂಬ ಮಾನವತಾವಾದಿ ತತ್ವವನ್ನು ಅನುಸರಿಸಿಕೊಂಡು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯನ್ನು ಬೆಳೆಸಿಕೊಂಡು ಬಂದಿದೆ. ಇಂತಹ ಸಮಾಜದ ವಿರುದ್ಧ ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶವನ್ನು ತೋರಿಸುತ್ತದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ (BNS), 2023ರ ವಿವಿಧ ವಿಧಿಗಳ ವ್ಯಾಪ್ತಿಗೆ ಒಳಪಡುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವಿಡಿಯೋ ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡು ತಕ್ಷಣವೇ ಎಫ್ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಿ ಕಾನೂನಿನ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ಬ್ರಹ್ಮಾವರದ ಅಧ್ಯಕ್ಷರಾದ ಶಂಕರ ಪೂಜಾರಿ, ಉಪಾಧ್ಯಕ್ಷರಾದ ರಾಘು ಪೂಜಾರಿ ಹೇರೂರು ಹಾಗೂ ಸಂತೋಷ ಪೂಜಾರಿ ಬಿರ್ತಿ, ಕಾರ್ಯದರ್ಶಿ ಶೇಖರ್ ಪೂಜಾರಿ, ಖಜಾಂಚಿ ಮೋಹನ್ ಪೂಜಾರಿ, ಜೊತೆ ಕಾರ್ಯದರ್ಶಿಗಳಾದ ಅಶೋಕ್ ಪೂಜಾರಿ ಹೇರೂರು ಮತ್ತು ಉಮೇಶ್ ಪೂಜಾರಿ ಬಿರ್ತಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪೂಜಾರಿ, ಮ್ಯಾನೇಜರ್ ಅಶೋಕ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸೀತಾರಾಮ್ ಪೂಜಾರಿ ಸೇರಿದಂತೆ ಬಿಲ್ಲವ ಸಮಾಜದ ಮುಖಂಡರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.







