ಕುಂದಾಪುರ: ಕುಂದಾಪುರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟಿ ಮಾರ್ಗದಲ್ಲಿ ಬಸ್ ಸೇರಿದಂತೆ ಪ್ರಯಾಣಿಕರ ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಮತ್ತೆ ಅನುಮತಿ ನೀಡಲಾಗಿದೆ.
ಬಾಳೆಬರೆ ಘಾಟಿ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆಯ ಕೆಳಭಾಗದ ಮಣ್ಣು ಕುಸಿತ ಉಂಟಾದ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.
ಇದೀಗ ರಸ್ತೆ ಸುರಕ್ಷತಾ ಕಾಮಗಾರಿ ಪೂರ್ಣಗೊಂಡಿದ್ದು, ರಸ್ತೆ ಮಟ್ಟದವರೆಗೆ ತಡೆಗೋಡೆ ನಿರ್ಮಿಸಿ ಕಾಂಕ್ರೀಟ್ ಅಳವಡಿಕೆ ಕಾರ್ಯ ಮುಗಿಸಲಾಗಿದೆ.
ಪ್ರಯಾಣಿಕರ ಅನುಕೂಲ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಹುಲಿಕಲ್ ಘಾಟಿ ಮಾರ್ಗದಲ್ಲಿ ಬಸ್ಗಳು, ಕಾರುಗಳು ಹಾಗೂ ಲಘು ಗೂಡ್ಸ್ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದು, ಅದರ ಬೆನ್ನಲ್ಲೇ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಹಿಂದೆ ಹೊರಡಿಸಿದ್ದ ಸಂಚಾರ ನಿಷೇಧ ಆದೇಶವನ್ನು ರದ್ದುಪಡಿಸಿ ಹೊಸ ಆದೇಶ ಹೊರಡಿಸಿದ್ದಾರೆ.
ಇದರಿಂದ ಕುಂದಾಪುರ ಹಾಗೂ ಶಿವಮೊಗ್ಗ ನಡುವಿನ ಪ್ರಯಾಣಿಕರಿಗೆ ಮತ್ತೆ ಸುಗಮ ಸಂಚಾರದ ಅವಕಾಶ ದೊರೆತಿದೆ.







