ಕಾರ್ಕಳ, : ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ದಲಿತ ಸಮುದಾಯದ ಎಲ್ಲ ವರ್ಗಗಳಿಗೂ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು ಎಂದು ಕಾರ್ಕಳ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಕಾರ್ಲಾ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, ಅಣ್ಣಪ್ಪ ನಕ್ರೆ ಹಾಗೂ ಪ್ರತಿಮಾ ರಾಣೆ ಅವರ ಹೇಳಿಕೆಗಳನ್ನು ಗಮನಿಸಿದಾಗ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯು ದಲಿತ ಸಮುದಾಯದ ಹಿತಾಸಕ್ತಿಗಿಂತ ರಾಜಕೀಯ ಉದ್ದೇಶಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.
ಅಂಬೇಡ್ಕರ್ ಭವನದ ಆವರಣ ಗೋಡೆ, ನೀರಿನ ವ್ಯವಸ್ಥೆ ಹಾಗೂ ಆಸನ ವ್ಯವಸ್ಥೆ ಸೇರಿದಂತೆ ಹಲವು ಮೂಲಭೂತ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಭವನದ ಅಭಿವೃದ್ಧಿಗಿಂತ ರಾಜಕೀಯ ಪ್ರಾಬಲ್ಯ ಸಾಧಿಸುವ ಪ್ರಯತ್ನಗಳು ನಡೆಯುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದರು.
ಸಮಿತಿ ರಚನೆ ವೇಳೆ ದಲಿತ ಸಮುದಾಯದ ಹಿರಿಯರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ನಿಯಮಾನುಸಾರ ಎಲ್ಲ ದಲಿತ ಸಮುದಾಯಗಳಿಂದ ತಲಾ ಒಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡುವ ಬದಲು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಮೂವರನ್ನು ಸಮಿತಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು. ಈ ಪೈಕಿ ಇಬ್ಬರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಸಮಿತಿ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.
ಅಂಬೇಡ್ಕರ್ ಭವನ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ; ಅದು ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿದೆ. ತಮ್ಮ ಪ್ರಶ್ನೆಗಳು ಹಾಗೂ ಒತ್ತಾಯಗಳು ರಾಜಕೀಯ ಉದ್ದೇಶದಿಂದಲ್ಲ, ಪಾರದರ್ಶಕ ಆಡಳಿತಕ್ಕಾಗಿ ಎಂದು ಅವರು ಸ್ಪಷ್ಟಪಡಿಸಿದರು.
ಸಮಿತಿ ರಚನೆಗೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ಸಾರ್ವಜನಿಕರ ಮುಂದಿಡಬೇಕು, ಆಯ್ಕೆಗೆ ಅನುಸರಿಸಿದ ಮಾನದಂಡಗಳನ್ನು ಬಹಿರಂಗಪಡಿಸಬೇಕು ಹಾಗೂ ಭವನದ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ಹೊಸ ಸಮಿತಿ ರಚಿಸುವಾಗ ಭವನದ ನಿರ್ಮಾಣ ಹಾಗೂ ಅಭಿವೃದ್ಧಿಗೆ ಶ್ರಮಿಸಿದ ಮೂಲ ದಲಿತ ಮುಖಂಡರು ಮತ್ತು ಸಮಾಜದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಜಕೀಯ ರಹಿತವಾಗಿ ನಿಯಮಾನುಸಾರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು. ದಲಿತ ಸಮಾಜದ ಎಲ್ಲ ಬಣಗಳಿಗೂ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಬೇಕು ಹಾಗೂ ಭವನದ ಲೆಕ್ಕಪತ್ರಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದರು.
ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಬದ್ಧವಾಗಿ ಸರ್ವಾನುಮತದ ಸಮಿತಿ ರಚನೆಗೆ ಎಲ್ಲರೂ ಮುಂದಾಗಬೇಕು ಎಂದು ಶ್ರೀನಿವಾಸ್ ಕಾರ್ಲಾ ಕರೆ ನೀಡಿದರು.






