ಬ್ರಹ್ಮಾವರ ಸಮೀಪದ ಬೈಕಾಡಿಯ ರಾಷ್ಟ್ರೀಯ ಹೆದ್ದಾರಿ-66ರ ರುಡ್ಸೆಟ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿಯ ಹೆಸರಾಂತ ಹುಲಿವೇಷ ಕಲಾವಿದ ಮಂಜುನಾಥ್ (43) ಮೃತಪಟ್ಟಿದ್ದಾರೆ.
ಗೋವಾದಿಂದ ಉಡುಪಿಗೆ ಇನ್ನೋವಾ ಕಾರಿನಲ್ಲಿ ಮರಳುತ್ತಿದ್ದ ವೇಳೆ ಮುಂದೆ ಸಾಗುತ್ತಿದ್ದ ಖಾಸಗಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಲಿವೇಷಧಾರಿಗಳಿಗೆ ಬಣ್ಣ ಹಚ್ಚುವ ಹಾಗೂ ಅಲಂಕಾರ ಕಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮಂಜುನಾಥ್ ಅವರ ನಿಧನಕ್ಕೆ ಕರಾವಳಿ ಕಲಾರಂಗದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






