ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯ ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಗಳ ದುಸ್ಥಿತಿ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಶನಿವಾರ ಸುಮಾರು 20 ಕಿ.ಮೀ. ರಸ್ತೆ ಪರಿಶೀಲನಾ ಜಾಥಾ ನಡೆಸಿತು.
ಜಾಥಾಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, 22 ವರ್ಷಗಳ ಬಿಜೆಪಿ ಆಡಳಿತದಲ್ಲೂ ಕಾರ್ಕಳದ ರಸ್ತೆಗಳು ಹದಗೆಟ್ಟಿದ್ದು, ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ಗಮನಕ್ಕೆ ರಸ್ತೆಗಳ ವಾಸ್ತವ ಸ್ಥಿತಿ ತರುವ ಉದ್ದೇಶದಿಂದ ಜಾಥಾ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಮಾತನಾಡಿ, ಕಾರ್ಕಳದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲು ರಾಜ್ಯ ಸರ್ಕಾರ ಸಿದ್ಧವಿದ್ದರೂ ಅದನ್ನು ಸಮರ್ಪಕವಾಗಿ ಬಳಸಲಾಗುತ್ತಿಲ್ಲ ಎಂದು ಆರೋಪಿಸಿದರು. ಜಾಥಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾಗಿ ಪುರಸಭೆಯ 23 ವಾರ್ಡ್ಗಳ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತ್ತೆ ಕಾಂಗ್ರೆಸ್ ಕಚೇರಿಯಲ್ಲಿ ಸಮಾಪ್ತಿಯಾಯಿತು.







