ಉಡುಪಿ :ಮಾಡೆಲಿಂಗ್ ಕ್ಷೇತ್ರ ದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿ ಎಂಬಲ್ಲಿ ಗುರುವಾರ ನಡೆದಿದೆ.
ಕೃತಿ ಕಲ್ಮಾಡಿ ನಿವಾಸಿ ರತ್ನಾ ಎಂಬವರ ಪುತ್ರಿ, ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಕಳೆದ ಸುಮಾರು ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ.
ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬೆಡ್ ರೂಮ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ
ಘಟನೆ ವಿವರ
ಆ.6ರಂದು ರತ್ನ ಅವರು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಅವರ ಎರಡನೇ ಪುತ್ರಿಯೂ ಕೆಲಸದ ನಿಮಿತ್ತ ಉಡುಪಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ರತ್ನ ಅವರು ಮನೆಗೆ ವಾಪಸ್ ಬಂದಾಗ, ಕೃತಿ ತಾಯಿಯನ್ನು ಹೊರಗೆ ಕಳುಹಿಸಿ ಮನೆಯ ಬಾಗಿಲನ್ನು ಒಳಗಿನಿಂದ ಹಾಕಿಕೊಂಡಿದ್ದರು ಎನ್ನಲಾಗಿದೆ.
ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ರತ್ನ ಅವರು ತಮ್ಮ ಅಣ್ಣ ಚಂದ್ರ ಅವರಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾರೆ. ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಬೆಡ್ರೂಮ್ ನಲ್ಲಿ ಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






