ಉಡುಪಿ, ಆ. 25: ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ. ಆದಿತ್ಯ ಕುಕ್ಕಿಕಟ್ಟೆ ಶಾಲೆಯ ವಿದ್ಯಾರ್ಥಿಯಾಗಿದ್ದು, ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಬಂದಿದ್ದನು ಎನ್ನಲಾಗಿದೆ .
ಭಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲ ಭಕ್ತರು ಕೆರೆಯ ನೀರಿಗೆ ಇಳಿದು ಈಜುತ್ತಿದ್ದರು ಎನ್ನಲಾಗಿದೆ. ಇದನ್ನು ಕಂಡ ಆದಿತ್ಯ ಕೂಡ ಕೆರೆಗೆ ಇಳಿದಿದ್ದನು. ಈತನೊಂದಿಗೆ ಬಂದಿದ್ದ ಸಂಬಂಧಿಗೆ ಈಜಲು ಬಾರದ ಕಾರಣ ಅವರು ನೀರಿಗೆ ಇಳಿದಿರಲಿಲ್ಲ.
ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದ ವೇಳೆ ಆದಿತ್ಯ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದನು.
ದೇವಸ್ಥಾನದವರು ತಕ್ಷಣ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕೆರೆಗೆ ಇಳಿದು ಹುಡುಕಾಟ ನಡೆಸಿದರು.
ಸುಮಾರು ಒಂದು ಗಂಟೆಯ ಕಾರ್ಯಾಚರಣೆಯ ಬಳಿಕ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಲಾಯಿತು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.






