ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಒಟ್ಟು ₹23,56,230 ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಅರುಣ್ ಎಸ್.ವಿ. (43) ಹಾಗೂ ಕೌಶೀಕ್ (19) ಎಂದು ಗುರುತಿಸಲಾಗಿದೆ.
ಪೆರಂಪಳ್ಳಿ ಸಂತೋಷನಗರದಲ್ಲಿ ಆಗಸ್ಟ್ 23ರಂದು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.
ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ವಶ
ಆರೋಪಿಗಳಿಂದ ಸುಮಾರು 88.400 ಗ್ರಾಂ ಚಿನ್ನ (₹13.26 ಲಕ್ಷ), 1 ಕೆಜಿ 360 ಗ್ರಾಂ ಬೆಳ್ಳಿ ಆಭರಣಗಳು (₹2.86 ಲಕ್ಷ), 1.45 ಗ್ರಾಂ ಚಿನ್ನದ ನಾಣ್ಯಗಳು (₹22,500), ಸುಮಾರು ₹2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ₹33 ಸಾವಿರ ನಗದು, ಎರಡು ಮೊಬೈಲ್ ಫೋನ್ಗಳು, ವಿದೇಶಿ ಕೈಗಡಿಯಾರ ಸೇರಿದಂತೆ ಹಲವು ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದಲ್ಲದೆ, ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಪಲ್ಸರ್ ಬೈಕ್ (₹45 ಸಾವಿರ) ಹಾಗೂ ಒಂದು ಆಟೋರಿಕ್ಷಾ (₹4 ಲಕ್ಷ) ಕೂಡ ವಶಪಡಿಸಿಕೊಳ್ಳಲಾಗಿದೆ.

ಐದು ಪ್ರಕರಣಗಳಿಗೆ ಸಂಬಂಧ
ಆರೋಪಿಗಳು ಉಡುಪಿ ನಗರ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಉಡುಪಿ ಕೊಡಂಕೂರು ಗ್ರಾಮದ ಶಶಿರೇಖಾ ಅವರ ಮನೆಯಲ್ಲಿ ನಡೆದ ಕಳ್ಳತನ – ಉಡುಪಿ ನಗರ ಠಾಣೆ ಪ್ರಕರಣ.
ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರ ಮನೆಯಲ್ಲಿ ನಡೆದ ಕಳ್ಳತನ – ಉಡುಪಿ ನಗರ ಠಾಣೆ ಪ್ರಕರಣ.
ನೇಜಾರು ಮಸೀದಿ ಸಮೀಪದ ಗ್ಯಾರೇಜ್ನಿಂದ ಪಲ್ಸರ್ ಬೈಕ್ ಕಳವು – ಮಲ್ಪೆ ಠಾಣೆ ಪ್ರಕರಣ.
ಕೆಳಾರ್ಕಳಬೆಟ್ಟುವಿನಲ್ಲಿ ತೃಪ್ತಿ ಅವಿನಾಶ್ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಪ್ರಕರಣ.
ಕೆಳಾರ್ಕಳಬೆಟ್ಟುವಿನಲ್ಲಿ ರವಿ ಉಪಾಧ್ಯ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಪ್ರಕರಣ.
ಆರೋಪಿಗಳು ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು, ಕಳ್ಳತನ ಮಾಡಿದ್ದ ಬೈಕ್ನಲ್ಲಿ ತೆರಳಿ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶೇಷ ತಂಡದಿಂದ ಕಾರ್ಯಾಚರಣೆ
ಮನೆಕಳ್ಳತನ ಪ್ರಕರಣದ ಆರೋಪಿಗಳು ಹಾಗೂ ಸೊತ್ತುಗಳ ಪತ್ತೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ಉಪನಿರೀಕ್ಷಕ (ತನಿಖೆ) ಪ್ರಕಾಶ್ ಅವರ ನೇತೃತ್ವದ ತಂಡವು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಈ ಕಾರ್ಯಾಚರಣೆ ಮಾನ್ಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ನಡೆದಿದೆ.
ಕಾರ್ಯಾಚರಣೆಯಲ್ಲಿ ಪಿಎಸ್ಐ ಪ್ರಕಾಶ್, ಪ್ರಸನ್ನ ಸಿ., ಜೀವನ್ ಕುಮಾರ್, ಕೃಷ್ಣದೇವಾಡಿಗ, ಆನಂದ ಗಾಣಿಗ, ಆನಂದ ಎಸ್., ಓಬಳೇಶ್, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್, ಹೇಮಂತ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಸಹಕರಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಅಭಿರಕ್ಷೆಗೆ ಪಡೆಯಲಾಗಿದೆ.
ಗಮನಿಸಿ: ಮೊದಲ ಆರೋಪಿ ಅರುಣ್ ಆಚಾರಿ ಈ ಹಿಂದೆ ಮಣಿಪಾಲ ಠಾಣಾ ವ್ಯಾಪ್ತಿಯ ಪೋಕ್ಸೋ ಪ್ರಕರಣದಲ್ಲಿ 9 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸಿ, ಜುಲೈ 2025ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.









