ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವಿ.ಕೆ. ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ವಿರುದ್ಧ ಅರಿವು ಮೂಡಿಸುವ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 1ರಂದು ಹಮ್ಮಿಕೊಳ್ಳಲಾಯಿತು.
ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್ಐ ಶ್ರೀ ವಿಠ್ಠಲ ಎಂ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದುಷ್ಟ ಶಕ್ತಿಗಳು ವಿದ್ಯಾರ್ಥಿಗಳನ್ನು ಡ್ರಗ್ಸ್ ಚಟಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದು, ವಿದ್ಯಾರ್ಥಿಗಳು ಕೆಟ್ಟ ಸ್ನೇಹದಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡ್ರಗ್ಸ್ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು ಉಂಟಾಗುವುದಲ್ಲದೆ, ಡ್ರಗ್ಸ್ಗೆ ವ್ಯಸನಿಯಾಗಿರುವ ವ್ಯಕ್ತಿಗಳಿಂದ ಸಮಾಜದಲ್ಲಿ ಹಲವು ಅಪರಾಧಗಳು ನಡೆಯುವ ಸಾಧ್ಯತೆಯಿದೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ಲಾಘನೀಯ ಎಂದು ಅವರು ಹೇಳಿದರು.
ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಶ್ರೀ ರಾಜೀವ ಕುಲಾಲ್ ಮಾತನಾಡಿ, ಬೀಡಿ ಮತ್ತು ಸಿಗರೇಟ್ ಸೇವನೆಯಿಂದ ಸೇವಿಸುವ ವ್ಯಕ್ತಿಗೆ ಮಾತ್ರವಲ್ಲದೆ ಸಾರ್ವಜನಿಕರಿಗೂ ಸಮಸ್ಯೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುಮಂಗಳ ಅವರು ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಮದ್ಯಪಾನದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಜೇಮ್ಸ್ ಡಯಾಸ್ ವಹಿಸಿದ್ದರು.ಯೋಜನಾಧಿಕಾರಿ ರಮೇಶ್ ಪಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೇಲ್ವಿಚಾರಕ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಜ್ಯೋತಿ ಸ್ವಾಗತಿಸಿ, ವಂದಿಸಿದರು.







