ಮಲ್ಪೆ, ಸೆ.11: ಮೀನುಗಾರಿಕೆ ಕೆಲಸಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ವಿಶ್ವೇಶ್ವರ ದಯಾನಂದ ಕೋಡಾರಕರ (31) ಅವರ ತಂದೆ ದಯಾನಂದ ಕೋಡಾರಕರ (59) ಅವರು ಕಳೆದ 20 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.
ಸೆಪ್ಟೆಂಬರ್ 9ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ‘ಶ್ರೀ ಕೃಷ್ಣ ತೀರ್ಥ’ (IND-KA-02-MM-6069) ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದಯಾನಂದ ಅವರು ರಾತ್ರಿ ಸುಮಾರು 8 ಗಂಟೆಗೆ ಮಲ್ಪೆ ಬಂದರಿಗೆ ವಾಪಸಾಗಿದ್ದರು. ಬಳಿಕ ಬೋಟಿನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿ ಬೋಟ್ನ್ನು ಬಂದರಿನಲ್ಲಿ ನಿಲ್ಲಿಸಲಾಗಿತ್ತು.
ಇತರ ಮೀನುಗಾರರು ತಮ್ಮ ರೂಮಿಗೆ ತೆರಳಿದ ಬಳಿಕ, ದಯಾನಂದ ಅವರು ಮತ್ತೆ ಮೀನುಗಾರಿಕೆ ಕೆಲಸಕ್ಕೆ ತೆರಳಲು ಬಲೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದ ವೇಳೆ ಆಕಸ್ಮಿಕವಾಗಿ ಬೋಟ್ನಿಂದ ಧಕ್ಕೆಯ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ ಎನ್ನಲಾಗಿದೆ.
ಅವರಿಗಾಗಿ ಹುಡುಕಾಟ ನಡೆಸಲಾಗಿದ್ದು, ಸೆಪ್ಟೆಂಬರ್ 10ರಂದು ಬೆಳಿಗ್ಗೆ ಸುಮಾರು 10.10 ಗಂಟೆಗೆ ಮೃತದೇಹ ಪತ್ತೆಯಾಗಿದೆ.
ಈ ಘಟನೆಗೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ







